ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೂಡ ಆರೆಂಜ್ ಅಲರ್ಟ್ ಮುಂದುವರಿದಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ.
ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮೋಡ ಕವಿದಿದ್ದು, ಆಗಾಗ ಮಳೆಯಾಗುತ್ತಿದೆ.
ಕರಾವಳಿ, ಮಲೆನಾಡಿನಾದ್ಯಂತ ಉತ್ತಮ ಮಳೆ ಸುರಿದಿದ್ದು, ಘಟ್ಟ ಪ್ರದೇಶದ ಚಾರ್ಮಾಡಿ ಭಾಗದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಕಡಲಬ್ಬರ ಕೂಡ ಅಧಿಕವಾಗಿದೆ.
ಕರಾವಳಿಯಲ್ಲಿ ಸೋಮವಾರದಿಂದ ನಾಲ್ಕು ದಿನಗಳವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿತ್ತು. ಅಲರ್ಟ್ ಗುರುವಾರದ ತನಕ ಇರಲಿದ್ದು, ಕರಾವಳಿ ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಅವಧಿಯಲ್ಲಿ ತಾಸಿಗೆ 40ರಿಂದ 50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿಯೂ ಬೀಸಲಿದ್ದು, ಮೀನುಗಾರರು ಎಚ್ಚರದಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ.
2-3 ದಿನಗಳಿಂದ ಚಾರ್ಮಡಿ ಘಾಟ್ ಪ್ರದೇಶದಲ್ಲಿ ನಿರಂತರ ಮಳೆಯಾಗಿದ್ದರಿಂದ ನೇತ್ರಾವತಿ ನದಿ ನೀರಿನ ಮಟ್ಟ ಮತ್ತೆ ಏರಿಕೆಯಾಗಿದೆ.
ಅಣಿಯೂರು ಹಳ್ಳ, ಸುನಾಳ ಹೊಳೆ, ನೆರಿಯ ಹೊಳೆ, ಎಳನೀರು ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಚಾರ್ಮಾಡಿ ಘಾಟಿ, ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಾಗಿದ್ದು, ಇದರಿಂದ ಕೆಳಗಿನ ಪ್ರದೇಶಗಳಲ್ಲಿ ಮತ್ತೆ ನೆರೆ ಆತಂಕ ಸೃಷ್ಟಿಯಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.