ADVERTISEMENT

ದ.ಕ: ಎಸ್ಸೆಸ್ಸೆಲ್ಸಿ ಪರೀಕ್ಷೆ 19ರಿಂದ

ಜಿಲ್ಲೆಯಲ್ಲಿ 179 ಪರೀಕ್ಷಾ ಕೇಂದ್ರಗಳು, 32,657 ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 15:51 IST
Last Updated 18 ಜುಲೈ 2021, 15:51 IST
ವಾಮಂಜೂರು ವಿದ್ಯಾಭಾರತಿ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷಾ ಕೊಠಡಿಯನ್ನು ಭಾನುವಾರ ಸ್ಯಾನಿಟೈಸ್ ಮಾಡಲಾಯಿತು.
ವಾಮಂಜೂರು ವಿದ್ಯಾಭಾರತಿ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯಲ್ಲಿ ಪರೀಕ್ಷಾ ಕೊಠಡಿಯನ್ನು ಭಾನುವಾರ ಸ್ಯಾನಿಟೈಸ್ ಮಾಡಲಾಯಿತು.   

ಮಂಗಳೂರು: ಜಿಲ್ಲೆಯಲ್ಲಿ ಸೋಮವಾರ (ಜು.19)ದಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪರೀಕ್ಷಾ ಕೇಂದ್ರಗಳು ಸಜ್ಜುಗೊಂಡಿವೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 32,657 ಮಕ್ಕಳು 179 ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ.

ಪರೀಕ್ಷೆಯ ಹಿಂದಿನ ದಿನವಾದ ಭಾನುವಾರ, ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿಗಳನ್ನು ಸ್ಥಳೀಯ ಸಂಸ್ಥೆ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು. ಪ್ರತಿ ಕೊಠಡಿಯಲ್ಲಿ ಡೆಸ್ಕ್‌ಗೆ ಒಬ್ಬರಂತೆ 12 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. 3,000ಕ್ಕೂ ಅಧಿಕ ಕೊಠಡಿ ಮೇಲ್ವಿಚಾರಕರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರ ಸಭೆ ಶನಿವಾರ ನಡೆಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಬರುವ ಮಕ್ಕಳು ಕೊಠಡಿಗೆ ತಲುಪುವವರೆಗೆ ಅವರಿಗೆ ದೈಹಿಕ ಶಿಕ್ಷಣ ಶಿಕ್ಷಕರು,ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕರ್ತರು ಮಾರ್ಗದರ್ಶನ ಮಾಡುತ್ತಾರೆ. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಈಗಾಗಲೇ ಪರೀಕ್ಷೆ ನಡೆಸುವ ಕ್ರಮದ ಬಗ್ಗೆ ಪ್ರಾತ್ಯಕ್ಷಿಕೆ ನಡೆಸಲಾಗಿದೆ. ಕೆಲವು ಕಡೆಗಳಲ್ಲಿ ಸ್ಥಳೀಯರ ಆಸಕ್ತಿಯಿಂದ ವಿಡಿಯೊಗಳನ್ನು ಮಾಡಿ, ಮಕ್ಕಳಲ್ಲಿ ಅರಿವು ಮೂಡಿಸಲು ಪ್ರಯತ್ನಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘15 ಮಕ್ಕಳ ನೋಂದಣಿ’

ಜಿಲ್ಲೆಯಲ್ಲಿ ಮೂಡುಬಿದಿರೆ ಬ್ಲಾಕ್‌ ಹೊರತುಪಡಿಸಿ ಇನ್ನುಳಿದ ಎಲ್ಲ ಬ್ಲಾಕ್‌ಗಳಲ್ಲಿ ಕೋವಿಡ್ ಪಾಸಿಟಿವ್ ಇರುವ ವಿದ್ಯಾರ್ಥಿಗಳು ಇದ್ದಾರೆ. ಈಗಾಗಲೇ 15 ಜನರು ನೋಂದಣಿ ಮಾಡಿಕೊಂಡಿದ್ದಾರೆ. ಈ ವಿದ್ಯಾರ್ಥಿಗಳಿಗೆ ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲಿ ಆರೋಗ್ಯ ಕಾರ್ಯಕರ್ತರು ಕೊಠಡಿ ಮೇಲ್ವಿಚಾರಕರಾಗಿರುತ್ತಾರೆ. ಪಾಸಿಟಿವ್ ಇರುವ ಮಗುವನ್ನು ಆಂಬುಲೆನ್ಸ್‌ನಲ್ಲಿ ಕರೆತಂದು, ಪರೀಕ್ಷೆ ಮುಗಿದ ನಂತರ ಮನೆಗೆ ತಲುಪಿಸುವ ಹೊಣೆಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗೆ ವಹಿಸಲಾಗಿದೆ. ಮಕ್ಕಳು ಆತಂಕವಿಲ್ಲದೆ ಪರೀಕ್ಷೆ ಬರೆಯಬಹುದು ಎಂದು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಜಿಲ್ಲಾ ಉಸ್ತುವಾರಿ ಶಮಂತ್ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.