ADVERTISEMENT

ಟ್ಯಾಂಕರ್ ಒದಗಿಸಲು ಉದ್ದಿಮೆಗಳು ಕೈಜೋಡಿಸಿ

ವಿಪತ್ತುಗಳಿಂದ, ಆಪತ್ತು ಆಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2023, 4:23 IST
Last Updated 18 ಮಾರ್ಚ್ 2023, 4:23 IST
ಮಂಗಳೂರಿನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಇದ್ದರು
ಮಂಗಳೂರಿನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕುಮಾರ್ ಇದ್ದರು   

ಮಂಗಳೂರು: ಅರಣ್ಯ ಇಲಾಖೆ ಹಾಗೂ ಅಗ್ನಿಶಾಮಕ ದಳದವರು ಜಿಲ್ಲೆಯಲ್ಲಿ ಕಾಳ್ಗಿಚ್ಚು ಹಾಗೂ ಇತರ ಬೆಂಕಿ ಅವಘಡಗಳನ್ನು ನಂದಿಸುವ ಕಾರ್ಯವನ್ನು ಉತ್ತಮವಾಗಿ ಮಾಡುತ್ತಿದ್ದು, ಈ ಕಾರ್ಯಕ್ಕೆ ಮತ್ತಷ್ಟು ಅನುಕೂಲವಾಗುವಂತೆ ಜಿಲ್ಲೆಯಲ್ಲಿರುವ ಬೃಹತ್ ಕೈಗಾರಿಕೆಗಳು, ಉದ್ದಿಮೆಗಳು ನೀರಿನ ಟ್ಯಾಂಕರ್‌ಗಳನ್ನು ಒದಗಿಸಿಕೊಡಲು ಕೈಜೋಡಿಸುವಂತೆ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಹೇಳಿದರು.

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಂಸಿಎಫ್, ಎಂಆರ್‌ಪಿಎಲ್, ಐಒಸಿ ಸೇರಿದಂತೆ ಸಾಕಷ್ಟು ಬೃಹತ್ ಕೈಗಾರಿಕೆಗಳು ಜಿಲ್ಲೆಯಲ್ಲಿವೆ. ಬೇಸಿಗೆಯಲ್ಲಿ ಅಲ್ಲಲ್ಲಿ ಕಂಡು ಬರುತ್ತಿರುವ ಕಾಳ್ಗಿಚ್ಚು ಶಮನಕ್ಕೆ ಅಗ್ನಿಶಾಮಕ ದಳದ ಜತೆಗೆ ಇನ್ನಷ್ಟು ಟ್ಯಾಂಕರ್‌ಗಳು ಇದ್ದಲ್ಲಿ ಅನುಕೂಲವಾಗಲಿದೆ. ಈ ದಿಸೆಯಲ್ಲಿ ವಹಿಸಬಹುದಾದ ಕ್ರಮಗಳ ಬಗ್ಗೆ ಕಾರ್ಯಪ್ರವೃತ್ತರಾಗುವಂತೆ ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಅವರಿಗೆ ಸೂಚಿಸಿದರು. ಈ ಕುರಿತು ಅಗ್ನಿಶಾಮಕ ದಳದಿಂದ ಪ್ರಸ್ತಾವ ಸಲ್ಲಿಸುವಂತೆ ಸೂಚಿಸಿದರು.

ADVERTISEMENT

ಜಿಲ್ಲೆಯಲ್ಲಿ ಅಕಾಲಿಕ ಮಳೆ ಎದುರಾದಲ್ಲಿ ಸಾರ್ವಜನಿಕರ ಆರೋಗ್ಯದ ಬಗ್ಗೆ ಗಮನವಿಟ್ಟು, ಅಗತ್ಯ ಔಷಧಗಳನ್ನು ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ದಾಸ್ತಾನು ಇಟ್ಟುಕೊಳ್ಳಬೇಕು. ಬಿಸಿಗಾಳಿ ಬೀಸುವ ಬಗ್ಗೆ ಸಾರ್ವಜನಿಕರಿಗೆ ಆಕಾಶವಾಣಿ ಹಾಗೂ ವಿವಿಧ ಮಾಧ್ಯಮಗಳ ಮೂಲಕ ಮುನ್ನೆಚ್ಚರಿಕಾ ಕ್ರಮಗಳನ್ನು ತಿಳಿಸಿಕೊಡಬೇಕು. ಜಿಲ್ಲೆಯ ಗೋಶಾಲೆಗಳಲ್ಲಿ ನೀರು ಹಾಗೂ ಮೇವು ಕಡಿಮೆಯಾಗದಂತೆ ಎಚ್ಚರ ವಹಿಸಬೇಕು ಎಂದು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಿದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೆ ಸಂಬಂಧಿಸಿ ಮೂಲ್ಕಿಯಲ್ಲಿ 10, ಮೂಡುಬಿದಿರೆಯಲ್ಲಿ ಎರಡು ಹಾಗೂ ಸೋಮೇಶ್ವರದಲ್ಲಿ ನಾಲ್ಕು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇತರ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಅಧಿಕಾರಿ ಸಭೆಗೆ ತಿಳಿಸಿದಾಗ, ಸಮಸ್ಯೆ ಎದುರಾದರಲ್ಲಿ ಜಿಲ್ಲೆಯ ಭೂಗರ್ಭ ತಜ್ಞರ ನೆರವಿನಿಂದ ಹೊಸ ಕೊಳವೆಬಾವಿ ಕೊರೆಯಿಸಿ ನೀರು ಪೂರೈಕೆಗೆ ಅಗತ್ಯ ಕ್ರಮ ವಹಿಸಬೇಕು. ಸರ್ಕಾರಿ ಜಾಗ, ಸರ್ಕಾರಿ ಕಚೇರಿಗಳ ಆಸುಪಾಸು, ಶಾಲೆ-ಅಂಗನವಾಡಿ ವ್ಯಾಪ್ತಿ ಸೇರಿದಂತೆ ಅಂತರ್ಜಲ ಇರುವಲ್ಲಿ ಕೊಳವೆಬಾವಿ ತೆಗೆದು ನೀರು ಪೂರೈಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿಗೆ ತಾತ್ವಾರ ಎದುರಾದಂತೆ ಎಚ್ಚರ ವಹಿಸಲು ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಕಿರಿಯ ಸಹಾಯಕ ಎಂಜಿನಿಯರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಳಮಟ್ಟದ ಸಿಬ್ಬಂದಿ ಒಳಗೊಂಡ ತಂಡವನ್ನು ರಚಿಸಲಾಗಿದೆ. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡಿಯುವ ನೀರಿನ ಸ್ಥಿತಿಗತಿಗಳನ್ನು ಅವಲೋಕಿಸಲಾಗುತ್ತಿದೆ. ಬಾಳೆಪುಣಿ, ನರಿಕೊಂಬು, ಕೊಣಾಜೆ, ತಲಪಾಡಿ ಹಾಗೂ ಮಂಜನಾಡಿಯಲ್ಲಿ ಒಣಪ್ರದೇಶವಿರುವ ಕಾರಣ, ಅಂತರ್ಜಲ ಮಟ್ಟ ಕಡಿಮೆ ಇದೆ, ಅಲ್ಲಿ ಲಭ್ಯವಿರುವ ಅನುದಾನದಲ್ಲಿ ಕೊಳವೆ ಬಾವಿ ಆಳ ಮತ್ತು ಫ್ಲಷಿಂಗ್ ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಸಭೆಗೆ ಮಾಹಿತಿ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ಚನ್ನಬಸಪ್ಪ, ಜಿಲ್ಲಾ ಅಗ್ನಿಶಾಮಕ ದಳದ ಅಧಿಕಾರಿ ಭರತ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.