ಮಂಗಳೂರು: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಂತೂರು ಹಾಗೂ ಕೆಪಿಟಿ ಜಂಕ್ಷನ್ ಗಳಲ್ಲಿ ಹೊಂಡಗಳಿಂದಾಗಿ ನಿತ್ಯವೂ ವಾಹನದಟ್ಟಣೆ ಉಂಟಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದರಿಂದ, ಈ ಎರಡೂ ಜಂಕ್ಷನ್ಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಮಂಗಳವಾರ ಪರಿಶೀಲಿಸಿದರು.
ಈ ಜಂಕ್ಷನ್ಗಳನ್ನು ಹಾಗುಹೊಗಲು ವಾಹನ ಸವಾರರು ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿರುವುದನ್ನು ಖುದ್ದು ವೀಕ್ಷಿಸಿದ ಜಿಲ್ಲಾಧಿಕಾರಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಕ್ರಮ ವಹಿಸುವಂತೆ ಪಾಲಿಕೆ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್ಎಚ್ಎಐ) ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತೂರು ಜಂಕ್ಷನ್ನಲ್ಲಿ ಹೆದ್ದಾರಿಯನ್ನು ರಸ್ತೆಗಳು ಕೂಡುವಲ್ಲಿ ಸೃಷ್ಟಿಯಾಗಿರುವ ಹೊಂಡಗಳನ್ನು ಮುಚ್ಚಲು ಪೇವರ್ ಫಿನಿಶ್ ಡಾಂಬರೀಕರಣ ನಡೆಸಬೇಕು. ಕೆಪಿಟಿ ಜಂಕ್ಷನ್ನಲ್ಲಿ ಉಂಟಾಗಿರುವ ಹೊಂಡಗಳನ್ನು ಮುಚ್ಚಲು ಪ್ರತಿ ಎರಡು ದಿನಕ್ಕೊಮ್ಮೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸುರತ್ಕಲ್ ರಸ್ತೆ ಹಾಗೂ ನಗರದ ಹೆದ್ದಾರಿ ಇಕ್ಕೆಲಗಳ ಸರ್ವಿಸ್ ರಸ್ತೆಗಳಲ್ಲಿ ಮಳೆ ನೀರು ಹರಿದು ಹೋಗದೇ ಸಮಸ್ಯೆಯಾಗುತ್ತಿರುವ ಬಗ್ಗೆಯೂ ದೂರುಗಳಿವೆ. ನೀರು ನಿಲ್ಲದಂತೆ ತಡೆಯಲು ಕ್ರಮ ವಹಿಸಬೇಕು. ಮಹಾವೀರ ವೃತ್ತ (ಪಂಪ್ವೆಲ್) ಹಾಗೂ ಇತರ ಕಡೆಗಳಲ್ಲಿ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ತ್ವರಿತವಾಗಿ ಮುಚ್ಚಬೇಕು ಎಂದು ಸೂಚಿಸಿದರು.
ಪಾಲಿಕೆ ಆಯುಕ್ತ ಆನಂದ ಸಿ.ಎಲ್, ಉಪ ಆಯುಕ್ತ ( ಕಂದಾಯ) ಗಿರೀಶ್ ನಂದನ್, ಕಾರ್ಯಪಾಲಕ ಎಂಜಿನಿಯರ್ ನರೇಶ್ ಶೆಣೈ, ಎನ್ಎಚ್ಎಐ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ, ಮಂಗಳೂರು ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.
‘ಕೆಪಿಟಿ ಮೇಲ್ಸೇತುವೆ ಕಾಮಗಾರಿ ಶೀಘ್ರ ಆರಂಭ’
‘ಕೆಪಿಟಿಯಲ್ಲಿ ಎನ್ಎಚ್ಎಐ ಮೇಲ್ಸೇತುವೆಯನ್ನು ನಿರ್ಮಿಸಲಿದ್ದು ಈ ಕಾಮಗಾರಿಯ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧವಾಗಿದೆ. ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದ್ದು ಕಾಮಗಾರಿಯು ಶೀಘ್ರವೇ ಆರಂಭವಾಗಲಿದೆ’ ಎಂದು ಆನಂದ ಸಿ.ಎಲ್ ತಿಳಿಸಿದರು.
‘ಕೆಪಿಟಿಯಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯಲಿರುವುದರಿಂದ ಸದ್ಯ ರಸ್ತೆಯ ಗುಂಡಿಗಳನ್ನು ಮುಚ್ಚುತ್ತೇವೆ. ನಂತೂರು ಜಂಕ್ಷನ್ನಲ್ಲಿ ವಾಹನ ಸಂಚಾರದಲ್ಲಿ ಮಾರ್ಪಾಡು ಮಾಡಿಕೊಂಡು ಪೇವರ್ ಫಿನಿಶ್ ಕಾಮಗಾರಿ ಕೈಗೆತ್ತಿಕೊಳ್ಳುತ್ತೇವೆ. ಸಾರ್ವಜನಿಕರು ಸಹಕರಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.