ಮಂಗಳೂರು: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಆರ್ಥಿಕತೆ ಕುಸಿದಿದ್ದು, ಅಭಿವೃದ್ಧಿ ಮರೀಚಿಕೆಯಾಗಿದೆ. ಈಗ ಬಿಜೆಪಿಯು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುತ್ತಿದೆ. ಆದರೆ, ಸರ್ಕಾರವನ್ನೇ ಬದಲಾಯಿಸಬೇಕಾದ ಅನಿವಾರ್ಯ ಸ್ಥಿತಿಗೆ ರಾಜ್ಯ ಬಂದು ನಿಂತಿದೆ’ ಎಂದು ಕಾಂಗ್ರೆಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿದರು.
ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್ ಸಂಕಷ್ಟದ ನಿರ್ವಹಣೆಯಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದೆ.ಕಳೆದ 16 ತಿಂಗಳಲ್ಲಿ ಕೋವಿಡ್ ವಿರುದ್ಧ ಹೋರಾಡುವುದು ಹಾಗೂ ಸಂತ್ರಸ್ತರಿಗೆ ನೆರವಾಗುವಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸೇವೆಯು ಶ್ಲಾಘನೆಗೆ ಒಳಗಾಗಿದೆ ಎಂದು ಅವರು ಹೇಳಿದರು.
ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಜ್ಜುಗೊಳ್ಳಲು ಜಿಲ್ಲಾ ಹಾಗೂ ಬ್ಲಾಕ್ ಸಂಯೋಜಕರನ್ನು ನೇಮಿಸಲಾಗಿದ್ದು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹಾಗೂ ‘ಸಹಾಯ ಹಸ್ತ’ ಕಾರ್ಯಕ್ರಮ ಸಮರ್ಪಕವಾಗಿ ನಿರ್ವಹಿಸುವಂತೆ ಸಂಯೋಜಕರಿಗೆ ಸೂಚನೆ ನೀಡಿದರು.
ಇದೇ ಸಂದರ್ಭ ಸದಾನಂದ ಪೂಂಜ, ಸುರೇಶ್ ಶೆಟ್ಟಿ, ಕೆ.ಎಸ್.ದೇವರಾಜ್, ಪಾಲಿಕೆ ಮಾಜಿ ಸದಸ್ಯರಾದ ಶರೀಫ್ ಕೂಳೂರು, ಇಸ್ಮಾಯಿಲ್, ಉಮ್ಮರ್ ಫಜೀರ್, ಕೆ.ಎಸ್. ಅಮೀರ್ ತುಂಬೆ, ವಿಶ್ವನಾಥ ಪೂಜಾರಿ ಬೆಳಂದೂರು, ಸುಧಾಕರ್ ಮುಂತಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಮಾಜಿ ಸಚಿವರಾದ ಬಿ.ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಲಾ ಶೆಟ್ಟಿ, ಪ್ರಮುಖರಾದ ಪಿ. ವಿ ಮೋಹನ್, ಶಶಿಧರ್ ಹೆಗ್ಡೆ, ಮಿಥುನ್ ರೈ, ಸದಾಶಿವ್ ಉಳ್ಳಾಲ್, ಶಾಹುಲ್ ಹಮೀದ್, ಶಾಲೆಟ್ ಪಿಂಟೋ, ಲುಕ್ಮಾನ್ ಬಂಟ್ವಾಳ್, ಪದಾಧಿಕಾರಿಗಳು, ಘಟಕಗಳ ಅಧ್ಯಕ್ಷರು, ಜಿಲ್ಲಾ ಸಂಯೋಂಜಕರು ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.