ಮುಡಿಪು(ದಕ್ಷಿಣ ಕನ್ನಡ): ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾವೂರು ಗ್ರಾಮದ ಮಲಾರ್ ಅರಸ್ತಾನದ ಮನೆಯಿಂದ ನಾಪತ್ತೆಯಾಗಿದ್ದ ಪಲ್ಲಿಯಬ್ಬ ಯಾನೆ ಪಲ್ಲಿಯಾಕ (70) ಶವವಾಗಿ ಪತ್ತೆಯಾಗಿದ್ದು, ತಂಡವೊಂದು ಕೊಲೆ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಇರಾ ಸಮೀಪದ ಗುಡ್ಡವೊಂದರಲ್ಲಿ ಹೂತು ಹಾಕಿದ್ದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಈ ಕೃತ್ಯ ಎಸಗಲಾಗಿದೆ ಎಂದು ಮೇಲ್ನೊಟಕ್ಕೆ ತಿಳಿದು ಬಂದಿದ್ದು, ನಿಖರ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಪಲ್ಲಿಯಬ್ಬ ಅವರು ಗುರುವಾರ ಸಂಜೆಯಿಂದ ಕಾಣೆಯಾಗಿದ್ದರು.
ಶುಕ್ರವಾರ ಮಧ್ಯಾಹ್ನದವರೆಗೂ ಇವರ ಮೊಬೈಲ್ ರಿಂಗ್ ಆಗುತ್ತಿತ್ತು. ಬಳಿಕ ಸ್ವಿಚ್ಡ್ ಆಫ್ ಆಗಿತ್ತು. ಇದರಿಂದ ಸಂಶಯಗೊಂಡ ಪಲ್ಲಿಯಬ್ಬ ಅವರ ಸಂಬಂಧಿಕರು ಇಬ್ಬರು ಶಂಕಿತರನ್ನು ವಿಚಾರಿಸಿದಾಗ ಕೊಲೆ ಕೃತ್ಯ ಬೆಳಕಿಗೆ ಬಂದಿದೆ ಎಂದು ತಿಳಿದು ಬಂದಿದೆ.
ಭಾನುವಾರ ಮುಂಜಾನೆ ಇರಾ ಪ್ರದೇಶದ ಪದವು ಬಳಿ ಶವ ಹೂತಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ಬಂಟ್ವಾಳ ಹಾಗೂ ಕೊಣಾಜೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.