ADVERTISEMENT

ಬಜೆಟ್  ನಂತರ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ: ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2021, 8:37 IST
Last Updated 30 ಜನವರಿ 2021, 8:37 IST
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ
ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ   

ಮಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಸ್ಥಗಿತಗೊಂಡಿದ್ದ ಅಭಿವೃದ್ಧಿ ಕಾರ್ಯಗಳು ವೇಗಪಡೆದುಕೊಂಡಿವೆ. ಬಜೆಟ್ ನಂತರ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ದೊರೆಯಲಿದೆ. ಅಲ್ಲದೆ ಸಾರಿಗೆ ನೌಕರರ ಪ್ರಮುಖ 10 ಬೇಡಿಕೆಗಳಲ್ಲಿ ಈಗಾಗಲೇ 9 ಬೇಡಿಕೆಗಳನ್ನು ಈಡೇರಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಹೇಳಿದ್ದಾರೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಕೊರೋನಾ ಲಾಕ್ ಡೌನ್ ಸಂದರ್ಭವೂ ಸಾರಿಗೆ ನೌಕರರ ಪೂರ್ಣ ವೇತನವನ್ನು ನೀಡಲಾಗಿತ್ತು. ಅವರ ಬೇಡಿಕೆಗಳಿಗೆ ಸರಕಾರ ಸ್ಪಂದಿಸಿದೆ. ನೌಕರರ ಬಾಕಿ ಉಳಿದ ವೇತನವನ್ನು ಮೂರು -ನಾಲ್ಕು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದವರು ಹೇಳಿದರು.

ಕೊರೋನಾ ಕಾರಣದಿಂದ ಕೆಲವು ತಿಂಗಳ ಕಾಲ ಅಭಿವೃದ್ಧಿ ಕಾರ್ಯಗಳಿಗೆ ತಡೆ ಉಂಟಾಗಿತ್ತು.ಇದೀಗ ವೇಗ ಪಡೆದುಕೊಂಡಿದೆ. ಬಜೆಟ್ ನಂತರ ಎಲ್ಲಾ ಅಭಿವೃದ್ಧಿ ಕಾರ್ಯಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿದೆ ಎಂದು ಸಚಿವರು ಹೇಳಿದರು.

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತರ ಕಾರ್ಯವೈಖರಿಯ ಬಗ್ಗೆ ನನಗೆ ಹೆಮ್ಮೆ ಇದೆ. ಎಂಟು ಕ್ಷೇತ್ರಗಳ ಪೈಕಿ7 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಇಲ್ಲಿನ ಕಾರ್ಯಕರ್ತರು ಗೆಲ್ಲಿಸಿದ್ದಾರೆ. ಅವಿರತ ಶ್ರಮ ಮತ್ತು ಬದ್ಧತೆಯಿಂದ ಇದು ಸಾಧ್ಯವಾಗಿದೆ ಎಂದು ಲಕ್ಷ್ಮಣ ಸವದಿ ಹೇಳಿದರು.

ಇದೇ ಸಂದರ್ಭ ಅವರನ್ನು ಜಿಲ್ಲಾ ಬಿಜೆಪಿ ಹಾಗೂ ಬಿಜೆಪಿ ದಕ್ಷಿಣ ಮಂಡಲದಿಂದ ಗೌರವಿಸಲಾಯಿತು. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಉಮಾನಾಥ ಕೋಟ್ಯಾನ್, ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ , ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದಿರೆ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.