ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಉಜಿರೆ ಬಳಿ ಇರುವ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿದೆ.
ಈ ಪ್ರಕರಣದ ಸಾಕ್ಷಿ ದೂರುದಾರ ವಿಚಾರಣೆ ವೇಳೆ ನೀಡಿರುವ ಮಾಹಿತಿಗಳಿಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ತಿಮರೋಡಿ ಮನೆಯಲ್ಲಿ ಮಹಜರು ನಡೆಸಲಿದ್ದಾರೆ ಎಂದು ಗೊತ್ತಾಗಿದೆ.
ವಿಧಿ ವಿಜ್ಞಾನ ತಜ್ಞರ ತಂಡ ಹಾಗೂ ಸಾಕ್ಷಿದೂರುದಾರ ಕೂಡ ಎಸ್ಐಟಿ ಅಧಿಕಾರಿಗಳ ಜೊತೆಗೆ ತಿಮರೋಡಿ ಅವರ ಮನೆಗೆ ತೆರಳಿದ್ದಾರೆ. ಈ ವೇಳೆ ಪೊಲೀಸ್ ಭದ್ರತೆಯನ್ನು ಬಿಗುಗೊಳಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ತುಕಡಿಗಳನ್ನು ಸ್ಥಳಕ್ಕೆ ಕರೆಸಿ ಕೊಳ್ಳಲಾಗಿದೆ. ತಿಮರೋಡಿ ಅವರ ಮನೆಗೆ ಮಾಧ್ಯಮದವರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಅವರ ಮನೆಯಿಂದ ಸುಮಾರು 1 ಕಿ. ಮೀ.ದೂರದಲ್ಲೇ ಮಾಧ್ಯಮದವರನ್ನು ಪೊಲೀಸರು ತಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.