ADVERTISEMENT

ಧರ್ಮಸ್ಥಳ ಗ್ರಾಮದ ಅಪರಾಧ ಕೃತ್ಯ: ಮಾಹಿತಿದಾರನಿಂದ ದೂರು

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 5:34 IST
Last Updated 4 ಜುಲೈ 2025, 5:34 IST
   

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಬಗ್ಗೆ, ವ್ಯಕ್ತಿಯೊಬ್ಬ ಮಾಹಿತಿ ನೀಡುವುದಾಗಿ ಬೆಂಗಳೂರಿನ ವಕೀಲರ ತಂಡದ ಮೂಲಕ ಹೇಳಿಕೆ ನೀಡಿದ್ದ ವ್ಯಕ್ತಿ ದೂರು ನೀಡಿದ್ದು, ಗುರುವಾರ ದೂರನ್ನು ಸ್ವೀಕರಿಸಲಾಗಿದೆ. ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಧರ್ಮಸ್ಥಳ ಗ್ರಾಮದಲ್ಲಿ ನಡೆದ ಅಪರಾಧ ಘಟನೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಂಚಿಕೊಳ್ಳಲು ವ್ಯಕ್ತಿಯೊಬ್ಬರು ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಉದ್ದೇಶಿಸಿದ್ದಾರೆ’ ಎಂದು  ಬೆಂಗಳೂರಿನ ವಕೀಲರಾದ  ಓಜಸ್ವಿ ಗೌಡ ಮತ್ತು ಸಚಿನ್ ದೇಶಪಾಂಡೆ  ಅವರು ಬರೆದಿದ್ದ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು. ಆ ಪತ್ರದ ವಿಶ್ವಾಸಾರ್ಹತೆಯನ್ನು ಪರಿಶೀಲಿಸಲು ಧರ್ಮಸ್ಥಳ ಪೊಲೀಸರು, ಆ ಪತ್ರದಲ್ಲಿ ಉಲ್ಲೇಖಿಸಿರುವ ಬೆಂಗಳೂರು ಮೂಲದ ವಕೀಲರನ್ನು ಸಂಪರ್ಕಿಸಿದ್ದರು. 

ಸೂಕ್ತ ರಕ್ಷಣೆಗೆ ವ್ಯವಸ್ಥೆ ಮಾಡಿದರೆ  ಮಾಹಿತಿ ನೀಡಿದ ವ್ಯಕ್ತಿ ಜಿಲ್ಲಾ ಪೊಲೀಸ್ ವರಿಷ್ಠರ ಕಚೇರಿಗೆ ಅಥವಾ ಧರ್ಮಸ್ಥಳ ಠಾಣೆಗೆ ಖುದ್ದಾಗಿ ಹಾಜರಾಗಲಿದ್ದಾನೆ ಎಂದು ವಕೀಲರು ತಿಳಿಸಿದ್ದರು. ಆ ಬಳಿಕ ಓಜಸ್ವಿ ಗೌಡ ಮತ್ತು ಸಚಿನ್ ದೇಶಪಾಂಡೆ ಅವರನ್ನು ಒಳಗೊಂಡ ವಕೀಲರ ತಂಡವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಯವರ ಕಚೇರಿಗೆ ಶುಕ್ರವಾರ ಭೇಟಿ ನೀಡಿತ್ತು. ಆದರೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ಅರುಣ್ ಅವರು ಕಚೇರಿಯಲ್ಲಿ ಲಭ್ಯವಿಲ್ಲದ ಕಾರಣ ವಕೀಲರ ತಂಡವು ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ.

ADVERTISEMENT

‘ಆ ವ್ಯಕ್ತಿಯಿಂದ ದೂರು ಸಲ್ಲಿಕೆಯಾಗಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಮತ್ತು ನಗರ ಪೊಲೀಸ್‌ ಕಮಿಷನರೇಟ್‌ನ ವಾಟ್ಸ್‌ ಆ್ಯಪ ಗ್ರೂಪ್‌ನಲ್ಲಿ ಪೊಲೀಸರು ಅಧಿಕೃತವಾಗಿ ಗುರುವಾರ ಮಾಹಿತಿ ಹಂಚಿಕೊಂಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.