ADVERTISEMENT

ಎಷ್ಟೇ ಟೀಕಿಸಿದರೂ ಗ್ಯಾರಂಟಿ ಯೋಜನೆ ಸ್ಥಗಿತವಾಗದು: ದಿನೇಶ್ ಗುಂಡೂರಾವ್

ಮೂಡುಬಿದಿರೆಯಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ 

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2024, 15:56 IST
Last Updated 10 ಮಾರ್ಚ್ 2024, 15:56 IST
ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಭಾನುವಾರ ನಡೆದ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು
ಮೂಡುಬಿದಿರೆಯ ಸ್ವರಾಜ್ಯ ಮೈದಾನದಲ್ಲಿ ಭಾನುವಾರ ನಡೆದ ಪಂಚ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶವನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು   

ಮೂಡುಬಿದಿರೆ: ವಿರೋಧ ಪಕ್ಷದವರು ಎಷ್ಟೇ ಟೀಕೆ ಮಾಡಿದರೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆ ನಮ್ಮ ಸರ್ಕಾರ ಅಧಿಕಾರದಲ್ಲಿ ಇರುವವರೆಗೂ ಮುಂದುವರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸ್ವರಾಜ್ಯ ಮೈದಾನದಲ್ಲಿ ಭಾನುವಾರ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿರುದ್ಯೋಗ, ಬೆಲೆ ಏರಿಕೆ, ಹಸಿವು ಮುಕ್ತ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದೇವೆ. ಚುನಾವಣೆ ಮುನ್ನ ನೀಡಿರುವ ಆಶ್ವಾಸನೆಗಳನ್ನು ಈಡೇರಿಸಿದ್ದೇವೆ ಎಂದರು.

ADVERTISEMENT

ಕೇಂದ್ರದಿಂದ ಅಸಹಕಾರ: ಜಿಎಸ್‌ಟಿ ಸಂಗ್ರಹದಲ್ಲಿ ರಾಜ್ಯವು ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಬಂಡವಾಳ ಹೂಡಿಕೆಯಲ್ಲಿ 3ನೇ ಸ್ಥಾನದಲ್ಲಿದೆ. ಆದರೂ ನಮ್ಮ ಪಾಲಿನ ನ್ಯಾಯಯುತ ಜಿಎಸ್‌ಟಿ ಹಣವನ್ನು ಕೇಂದ್ರ ಸರ್ಕಾರ ನಮಗೆ ನೀಡುತ್ತಿಲ್ಲ. ಬರಗಾಲದಿಂದ ಜನ ತತ್ತರಿಸಿದರೂ ಕೇಂದ್ರ ಸರ್ಕಾರ ಬರ ಪರಿಹಾರ ಕೊಟ್ಟಿಲ್ಲ. ಅನ್ನ ಬಾಗ್ಯದ ಅಕ್ಕಿ ಕೊಡುತ್ತಿಲ್ಲ ಎಂದು ದೂರಿದರು.

ಫಲಾನುಭವಿಗಳಾದ ಬೇಬಿ ಬಂಗಬೆಟ್ಟು, ಇಂದಿರಾ ಬೆಳುವಾಯಿ, ಸೌಮ್ಯ ಪುತ್ತಿಗೆ ಅನಿಸಿಕೆ ಹಂಚಿಕೊಂಡರು.

ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಅಭಯಚಂದ್ರ ಜೈನ್, ಶಕುಂತಳಾ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆನಂದ ಕೆ., ಉಪ ವಿಭಾಗಾಧಿಕಾರಿ ಹರ್ಷವರ್ಧನ, ನೋಡಲ್ ಅಧಿಕಾರಿ ಗೋಕುಲ್‌ದಾಸ್‌ ನಾಯಕ್ ಭಾಗವಹಿಸಿದ್ದರು. ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್‌ ಸ್ವಾಗತಿಸಿದರು. ನಿತೇಶ್ ಬಲ್ಲಾಳ್ ನಿರೂಪಿಸಿದರು. ತಾಲ್ಲೂಕು ಪಂಚಾಯಿತಿ ಇಒ ಲೋಕೇಶ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.