ADVERTISEMENT

ಕೊಲೆಗಳು ಆಗುತ್ತಲೇ ಇರುತ್ತವೆ; ಎಲ್ಲರ ಮನೆಗೆ ಹೋಗಬೇಕಿಲ್ಲ: ದಿನೇಶ್‌ ಗುಂಡೂರಾವ್‌

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಬಿಜೆಪಿ ಟೀಕೆಗೆ ಸಚಿವರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 10 ಮೇ 2025, 6:33 IST
Last Updated 10 ಮೇ 2025, 6:33 IST
ದಿನೇಶ್‌ ಗುಂಡೂರಾವ್‌
ದಿನೇಶ್‌ ಗುಂಡೂರಾವ್‌   

ಮಂಗಳೂರು: ‘ಕೊಲೆಗಳು ಆಗುತ್ತಲೇ ಇರುತ್ತವೆ. ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದೂ ಮುಖ್ಯವಾಗುತ್ತದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಬಜಪೆ ಬಳಿ ಈಚೆಗೆ ಹತ್ಯೆಗೀಡಾದ ಹಿಂದುತ್ವ ಪರ ಕಾರ್ಯಕರ್ತ, ರೌಡಿಶೀಟರ್‌ ಸುಹಾಸ್‌ ಶೆಟ್ಟಿ ಮನೆಗೆ ಸಚಿವರು ಭೇಟಿ ನೀಡಿಲ್ಲ ಎಂಬ ಬಿಜೆಪಿಯವರ ಆರೋಪಕ್ಕೆ ಸಚಿವರು ಹೀಗೆ ಪ್ರತಿಕ್ರಿಯಿಸಿದರು.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಹಾಸ್‌ ಶೆಟ್ಟಿ ಕೊಲೆ ಏಕೆ ಆಗಿದೆ ಎಂಬುದನ್ನು ತಿಳಿದುಕೊಂಡಿರುವ ಸರ್ಕಾರ, ತಪ್ಪಿತಸ್ಥರನ್ನು ಬಂಧಿಸುವ ಮೂಲಕ ತನ್ನ ಜವಾಬ್ದಾರಿ ನಿರ್ವಹಿಸಿದೆ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ’ ಎಂದರು.

ADVERTISEMENT

‘ಕೊಲೆ ಯಾರು ಮಾಡಿದ್ದಾರೆ ಅವರನ್ನು ಬಂಧಿಸಿದ್ದೇವೆ. ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂಬ ಬಿಜೆಪಿಯವರ ಕಪೋಲಕಲ್ಪಿತ ಆರೋಪಗಳಿಗೆ ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಊಹಾಪೋಹದ ಹೇಳಿಕೆ ನೀಡುವುದನ್ನು ಬಿಟ್ಟು ಬಿಜೆಪಿಯವರು ತಮ್ಮ ಬಳಿ ಸ್ಪಷ್ಟ ಮಾಹಿತಿ ಇದ್ದರೆ ತಿಳಿಸಲಿ’ ಎಂದು ಹೇಳಿದರು.

‘ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಹತ್ಯೆ ನಡೆದ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಪೊಲೀಸರು ಕ್ರಮಕೈಗೊಳ್ಳುತ್ತಿದ್ದಾರೆ. ಕೆಲವೊಬ್ಬರು ನಕಲಿ ಹೆಸರಲ್ಲಿ ಖಾತೆ ಬಳಸುತ್ತಿದ್ದು, ಅವರು ಯಾರು ಎಂಬುದು ತಕ್ಷಣಕ್ಕೆ ಗೊತ್ತಾಗುವುದಿಲ್ಲ. ಸಂಬಂಧಿಸಿದ ಸಂಸ್ಥೆಗಳಿಗೆ ಪತ್ರ ಬರೆದು ಮಾಹಿತಿ ತಿಳಿದುಕೊಂಡು ಕ್ರಮಕೈಗೊಳ್ಳಲಾಗುತ್ತಿದೆ‘ ಎಂದರು.

ಹರೀಶ್‌ ಪೂಂಜ ಹೇಳಿಕೆ: ‘ಕೋಮುಪ್ರಚೋದನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ವಿರುದ್ಧ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಆಗಬೇಕಾಗುತ್ತದೆ. ಅವರು ಮಾಡಿರುವ ವೈಯಕ್ತಿಕ ಟೀಕೆ ಕೀಳು ಅಭಿರುಚಿಯಿಂದ ಕೂಡಿದೆ. ಅವರ ಮಾತುಗಳು ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿ. ಹೀಗಾಗಿ ಪ್ರತ್ಯುತ್ತರ ಕೊಡುವ ಅವಶ್ಯಕತೆ ಇಲ್ಲ’ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.