ದಿನೇಶ್ ಗುಂಡೂರಾವ್
– ಪ್ರಜಾವಾಣಿ ಚಿತ್ರ
ಮಂಗಳೂರು: ರಾಜ್ಯದಲ್ಲಿ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಶ್ರೀಮಂತ ದೇವಸ್ಥಾನಗಳ ಆದಾಯದ ಶೇ 10ರಷ್ಟು ಮೊತ್ತವನ್ನು ಬಳಸುವ ಕುರಿತ ಮಸೂದೆಗೆ ವಿಧಾನಮಂಡಲದಲ್ಲಿ ಅಂಗೀಕಾರ ಲಭಿಸಿದೆ. ಆದರೆ ರಾಜ್ಯಪಾಲರು ಅದರ ಬಗ್ಗೆ ಅಸಡ್ಡೆ ಹೊಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.
ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಸಚಿವರು ‘ಮಸೂದೆಗೆ ರಾಜ್ಯಪಾಲರು ಸಹಿ ಮಾಡಿದ್ದರೆ ‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೂ ಅಲ್ಲಿ ಕೆಲಸ ಮಾಡುತ್ತಿರುವವರ ಜೀವನ ಮಟ್ಟ ಸುಧಾರಿಸುವುದಕ್ಕೂ ಅನುಕೂಲ ಆಗುತ್ತಿತ್ತು. ಆದರೆ ಅವರು ಅದನ್ನು ಅನಗತ್ಯವಾಗಿ ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ’ ಎಂದರು.
ಆದಾಯ ದುರ್ಬಳಕೆ ಆರೋಪ:
ಧಾರ್ಮಿಕ ದತ್ತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದೇವಸ್ಥಾನಗಳ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗುವ ಹಣವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಅನ್ಯಧರ್ಮದ ಅಭಿವೃದ್ಧಿಗೆ ಬಳಸುತ್ತಿದೆ ಎಂಬ ಆರೋಪದ ಕುರಿತು ಸಭೆಯಲ್ಲಿ ಗಂಭೀರ ಚರ್ಚೆಯಾಯಿತು.
‘ಧಾರ್ಮಿಕ ದತ್ತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದೇವಸ್ಥಾನಗಳ ಬಗ್ಗೆ ರಾಜಕೀಯ ಲಾಭಕ್ಕಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅದು ರಾಷ್ಟ್ರಮಟ್ಟದಲ್ಲೂ ಚರ್ಚೆ ಆಗುತ್ತಿದೆ. ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅವರು ಹಿಂದೂ ವಿರೋಧಿಗಳು ಎಂಬ ಆರೋಪವೂ ಆಗಾಗ ಕೇಳಬರುತ್ತಿದೆ. ಆದರೆ ದೇವಸ್ಥಾನಗಳಲ್ಲಿ ಅರ್ಚಕರಿಗೆ ತಸ್ತೀಕ್ ನೀಡುವ ಪದ್ಧತಿಯನ್ನು ಆರಂಭಿಸಿದ್ದೇ ಕಾಂಗ್ರೆಸ್ನ ಗುಂಡೂರಾವ್ ಅವರು. ಈಗ ಮೂರು ಬಾರಿ ತಸ್ತೀಕ್ ಮೊತ್ತ ಹೆಚ್ಚಳ ಮಾಡಿರುವುದು ಸಿದ್ದರಾಮಯ್ಯ ಸರ್ಕಾರ’ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಶಾಸಕ ಮಂಜುನಾಥ ಭಂಡಾರಿ ಮಾತನಾಡಿ ‘ಹಿಂದು ದೇವಸ್ಥಾನಗಳ ಹಣ ಅನ್ಯಧರ್ಮದ ಏಳಿಗೆಗಾಗಿ ಬಳಸಲಾಗುತ್ತಿದೆ ಎಂಬ ಸುಳ್ಳು ಆರೋಪ ಆಗಾಗ ಕೇಳಿಬರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ, ಹಣ ದುರುಪಯೋಗ ಆಗುತ್ತಿಲ್ಲ ಎಂಬ ಮಾಹಿತಿ ಇರುವ ಫಲಕವನ್ನು ದೇವಸ್ಥಾನಗಳ ಎದುರು ಅಳವಡಿಸಬೇಕು’ ಎಂದು ಆಗ್ರಹಿಸಿದರು.
ಬೆಳ್ತಂಗಡಿಯ ದುರ್ಗಾಪರಮೇಶ್ವರಿ ದೇವಸ್ಥಾನ ಸಮಿತಿ ಅಧ್ಯಕ್ಷ ರಾಘವ ನಾಳ ಮಾತನಾಡಿ, ಹುಂಡಿ ಕಾಣಿಕೆ ಸರ್ಕಾರಕ್ಕೆ ಹೋಗುತ್ತದೆ ಎಂಬುದು ಅಪ್ಪಟ ಸುಳ್ಳು. ದೇವಸ್ಥಾನಗಳ ಆಡಳಿತ ಸಮಿತಿಗಳೇ ಹುಂಡಿಯನ್ನು ನಿರ್ವಹಿಸುತ್ತಿದ್ದು ಸರ್ಕಾರಕ್ಕೆ ಹಣ ಹೋಗಲು ಸಾಧ್ಯವೇ ಇಲ್ಲ ಎಂದರು. ಹಿಂದೂ ದೇವಾಲಯಗಳ ಹಣವನ್ನು ಅನ್ಯ ಧರ್ಮದವರಿಗೆ ಕೊಡಲಾಗುತ್ತಿದೆ ಎಂದು ರಾಷ್ಟ್ರಮಟ್ಟದಲ್ಲಿ ಸುಳ್ಳು ಸುದ್ದಿ ಹಬ್ಬುವ ಮಾಧ್ಯಮದವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ವ್ಯವಸ್ಥಾಪನಾ ಸಮಿತಿಯ ಸದಸ್ಯರೊಬ್ಬರು ಅಭಿಪ್ರಾಯಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.