ಮೂಡುಬಿದಿರೆ: ‘ಕ್ರೀಡಾಪಟುಗಳು ದೇಶದ ಭವಿಷ್ಯವನ್ನು ರೂಪಿಸುವವರು. ಅವರಿಗೆ ಪ್ರೋತ್ಸಾಹ ಸಿಗಬೇಕು’ ಎಂದು ಮಂಗಳೂರು ಸಿಟಿ ಪೊಲೀಸ್ ಕಮಿಷನರ್ ಡಾ.ಪಿ.ಎಸ್ ಹರ್ಷ ಹೇಳಿದರು.
ಮಂಗಳೂರು ವಿಶ್ವವಿದ್ಯಾಲಯ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಭಾನುವಾರ ಬೆಳಿಗ್ಗೆ ಮೂಡುಬಿದಿರೆಯಲ್ಲಿ ನಡೆದ 79ನೇ ಅಖಿಲ ಭಾರತ ಅಂತರವಿಶ್ವವಿದ್ಯಾಲಯ ಪುರುಷರ ಕ್ರಾಸ್ಕಂಟ್ರಿ ಕೂಟಕ್ಕೆ ಅವರು ಚಾಲನೆ ನೀಡಿ ಮಾತನಾಡಿದರು.
ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ. ಪಿ. ಸುಬ್ರಹ್ಮಣ್ಯ ಯಡಪಡಿತ್ತಾಯ, `ಆಳ್ವಾಸ್ ಶಿಕ್ಷಣ ಸಂಸ್ಥೆಯಂತಹ ಮಾದರಿ ಶಿಕ್ಷಣ ಸಂಸ್ಥೆಯನ್ನು ಮಂಗಳೂರು ವಿಶ್ವ ವಿದ್ಯಾಲಯ ಹೊಂದಿರುವುದು ಹೆಮ್ಮೆಯ ವಿಚಾರ' ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ. ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಚಿನ್ನಪ್ಪ ಗೌಡ, ಅಂತರರಾಷ್ಟ್ರೀಯ ಕ್ರೀಡಾಪಟು ಬಾಬು ಶೆಟ್ಟಿ, ಹಿರಿಯ ತರಬೇತಿದಾರ ಹರ್ಪಾಲ್ ಸಿಂಗ್ ಮತ್ತು ಸಮಾಜ ಸೇವಕ ಪ್ರಸಾದ್ ರೈ, ಮಂಗಳೂರು ವಿಶ್ವವಿದ್ಯಾಲಯ ಕ್ರೀಡಾ ವಿಭಾಗದ ನಿರ್ದೇಶಕ ಡಾ.ಕಿಶೋರ್ ಕುಮಾರ್, ದೈಹಿಕ ನಿರ್ದೇಶಕ ಪ್ರವೀಣ್, ಆಳ್ವಾಸ್ ಕಾಲೇಜಿನ ಪ್ರಾಚಾರ್ಯ ಡಾ.ಕುರಿಯನ್, ಉಪನ್ಯಾಸಕ ರಾಜೇಶ್ ಡಿಸೋಜ ಉಪಸ್ಥಿತರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.