ADVERTISEMENT

ವಿದ್ಯಾರ್ಥಿ ವಸತಿ ನಿಲಯ ಸಮಸ್ಯೆ ನಿವಾರಣೆಗೆ ಕ್ರಮ

ಮಂಗಳೂರು: ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 4:46 IST
Last Updated 8 ಆಗಸ್ಟ್ 2021, 4:46 IST
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ   

ಮಂಗಳೂರು: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿ ಖಾತೆಯನ್ನು ನೀಡಿದ್ದು, ಇಲಾಖೆಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಸರ್ಕಾರದ ಸೌಲಭ್ಯ ಒದಗಿಸುವ ಮೂಲಕ ಅವರನ್ನು ಮುಖ್ಯವಾಹಿನಿಗೆ ತರುವುದಕ್ಕೆ ಆದ್ಯತೆ ನೀಡಲಾಗುವುದು ಎಂದರು.

ಇಲಾಖೆಗಳಲ್ಲಿ ಇರುವ ಸಮಸ್ಯೆ, ಅವುಗಳ ಪರಿಹಾರ ಕ್ರಮಗಳ ಕುರಿತು ಅಧ್ಯಯನ ಮಾಡುತ್ತಿದ್ದು, ಒಂದು ವಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅನುದಾನ ಬಳಸುವಮೂಲಕ ವಿವಿಧ ಸಮುದಾಯಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯಿಂದ ನಡೆಸಲಾಗುತ್ತಿರುವ ವಸತಿ ನಿಲಯಗಳ ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು. ಇವು ಪ್ರಮುಖ ಖಾತೆಗಳಾಗಿದ್ದು, ಬಡ ಹಾಗೂ ಶೋಷಿತ ಜನರ ಕಲ್ಯಾಣಕ್ಕೆ ಕೆಲಸ ಮಾಡುವ ಅವಕಾಶ ದೊರೆತಿದೆ. ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳನ್ನು ಅಧ್ಯಯನ ಮಾಡಲಾಗುವುದು. ಅವುಗಳ ಪರಿಹಾರಕ್ಕೆ ಸೂಕ್ತ ಮಾರ್ಗೋಪಾಯಗಳನ್ನು ರೂಪಿಸಲಾಗುವುದು ಎಂದು ತಿಳಿಸಿದರು.

‘ಮುಜರಾಯಿ ಖಾತೆ ಸಚಿವನಾಗಿ ಎರಡು ಬಾರಿ ಕಾರ್ಯನಿರ್ವಹಿಸಿದ್ದು, ಮುಜರಾಯಿ ಖಾತೆಯಲ್ಲಿ ಉತ್ತಮ ಕೆಲಸ ಮಾಡಿದ ತೃಪ್ತಿ ಇದೆ. ಹೊಸ ಸರ್ಕಾರದಲ್ಲಿ ಖಾತೆ ಬದಲಾಗಿದೆ. ಶಶಿಕಲಾ ಜೊಲ್ಲೆ ಅವರಿಗೆ ಈ ಖಾತೆ ನೀಡಲಾಗಿದ್ದು, ಅಗತ್ಯ ಸಲಹೆ, ಸೂಚನೆಗಳನ್ನು ಅವರಿಗೆ ನೀಡುತ್ತೇನೆ’ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಮುಂಬರುವ ಹಬ್ಬಗಳಿಗೆ ನಿರ್ಬಂಧ ವಿಧಿಸುವ ಯೋಚನೆ ಇಲ್ಲ. ಆದರೆ, ಕೋವಿಡ್–19 ಮಾರ್ಗಸೂಚಿಗೆ ಅನುಗುಣವಾಗಿ ಹಬ್ಬಗಳನ್ನು ಆಚರಿಸುವ ಜವಾಬ್ದಾರಿ ಸಾರ್ವಜನಿಕರ ಮೇಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.