ADVERTISEMENT

ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ, ಆಶ್ರಯ ನೀಡಿ

ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2020, 3:13 IST
Last Updated 5 ಡಿಸೆಂಬರ್ 2020, 3:13 IST
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿದರು.
ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿದರು.   

ಮಂಗಳೂರು: ‘ನಗರದಲ್ಲಿರುವ ನಿರ್ಗತಿಕ ಕೇಂದ್ರಗಳನ್ನು ಗುರುತಿಸಿ, ನಿರಾಶ್ರಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಆಶ್ರಯ ನೀಡಬೇಕು’ ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚಿಸಿದರು.

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ನಿರಾಶ್ರಿತರಲ್ಲಿ ಮಲೇರಿಯಾ ಪ್ರಕರಣಗಳ ವರದಿ ಮತ್ತು ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಭೆಯಲ್ಲಿ ಅವರು ಮಾತನಾಡಿದರು.

‘ಮಹಾನಗರಪಾಲಿಕೆ ಆರೋಗ್ಯಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಂಡ ರಚಿಸಿ ಸಮನ್ವಯದಿಂದ ಕೆಲಸ ಮಾಡಬೇಕು. ದಿನಕ್ಕೆ ಒಂದು ವಾರ್ಡ್‌ನಂತೆ ನಿರಾಶ್ರಿತರನ್ನು ಗುರುತಿಸಿ ವಾಹನದ ಮೂಲಕ ಅವರನ್ನು ನಿರ್ಗತಿಕ ಕೇಂದ್ರಗಳಿಗೆ ತಲುಪಿಸಿ ಆಶ್ರಯ ನೀಡಬೇಕು. ಮಲೇರಿಯಾ ರೋಗ ಲಕ್ಷಣಗಳು ಕಂಡುಬಂದರೆ ಸೂಕ್ತ ಚಿಕಿತ್ಸೆ ನೀಡಬೇಕು’ ಎಂದರು.

ADVERTISEMENT

‘ಎಂಡೋಸಲ್ಫಾನ್ ಸಂತ್ರಸ್ತರಿಗೆ ಮಾಸಿಕ ಪಿಂಚಣಿ ಪಾವತಿಯಾಗುತ್ತಿದೆಯೇ ಎಂಬುದನ್ನು ಜಿಲ್ಲೆಯ ಎಲ್ಲಾ ತಹಶೀಲ್ದಾರರು ಪರಿಶೀಲಿಸಿ ವರದಿ ನೀಡಬೇಕು. ಜಿಲ್ಲೆಯ 6 ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್‍ನಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದ ವಿಶೇಷ ತಜ್ಞ ವೈದ್ಯರ ಶಿಬಿರವನ್ನು ಮುಂದಿನ ತಿಂಗಳಿಂದ ಪುನರಾರಂಭಿಸಬೇಕು’ ಎಂದು ಸೂಚಿಸಿದರು.

‘ಎಂಡೋಸಲ್ಫಾನ್ ಸಂತ್ರಸ್ತರಿಗೆ ಪಾಲನಾ ಕೇಂದ್ರದ ಸೇವೆ, ಔಷಧ ವಿತರಣೆ ಸೇರಿದಂತೆ ಕೌಶಲ ಅಭಿವೃದ್ಧಿ ತರಬೇತಿ ಕೇಂದ್ರದ ಸೇವೆಗಳನ್ನು ಒದಗಿಸಲಾಗುತ್ತಿದೆ. ಕೊವೀಡ್-19 ಹಿನ್ನೆಲೆಯಲ್ಲಿ ಸಂತ್ರಸ್ತ ಮಕ್ಕಳು ಕೇಂದ್ರಕ್ಕೆ ಬರಲು ಅವಕಾಶವಿಲ್ಲದೇ ಇರುವುದರಿಂದ, ಕೇಂದ್ರದ ಸಿಬ್ಬಂದಿ ಮೂಲಕ ಅವರ ಮನೆಗೆ ಭೇಟಿ ನೀಡಿ, ಸೇವೆಗಳನ್ನು ನೀಡುತ್ತಿದ್ದಾರೆ’ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದರು.

ಮಲೇರಿಯಾ ನಿಯಂತ್ರಣಾಧಿಕಾರಿ ನವೀನ್ ಚಂದ್ರ ಕುಲಾಲ್, ಸಾಮಾಜಿಕ ಭದ್ರತೆ ಇಲಾಖೆ ಸಹಾಯಕ ನಿರ್ದೇಶಕ ಎ.ಡಿ. ಬೋಪಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.