ADVERTISEMENT

ತಿಂಗಳ 3ನೇ ಸೋಮವಾರ ಸಭೆ ಕಡ್ಡಾಯ

ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಮೇ 2022, 15:32 IST
Last Updated 16 ಮೇ 2022, 15:32 IST
ಮಂಗಳೂರಿನಲ್ಲಿ ಸೋಮವಾರ ನಡೆದ ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾತನಾಡಿದರು.
ಮಂಗಳೂರಿನಲ್ಲಿ ಸೋಮವಾರ ನಡೆದ ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮಾತನಾಡಿದರು.   

ಮಂಗಳೂರು: ಜಿಲ್ಲೆಯ ಅಂಗವಿಕಲರ ಸಮಸ್ಯೆಗಳನ್ನು ಬಗೆಹರಿಸಲು ಪ್ರತಿ ತಿಂಗಳ 3ನೇ ಸೋಮವಾರ ಸಭೆ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಗೋಪಾಲಕೃಷ್ಣ ಅವರಿಗೆ ತಾಕೀತು ಮಾಡಿದರು.

ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ಅವರು ಸೂಚನೆ ನೀಡಿದರು. ಇನ್ನು ಮುಂದೆ ಕಡ್ಡಾಯವಾಗಿ ಪ್ರತಿ ತಿಂಗಳ 3ನೇ ಸೋಮವಾರ ಅಂಗವಿಕಲರ ಸಮಸ್ಯೆಗಳನ್ನು ಪರಿಹರಿಸುವ ಸಭೆಯನ್ನು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಬೇಕು. ಸಭೆಯಲ್ಲಿ ಅವರ ಕುಂದು ಕೊರತೆ ಅಥವಾ ಅಹವಾಲುಗಳು ಇತ್ಯರ್ಥವಾಗಬೇಕು ಎಂದರು.

ಅಂಗವಿಕಲರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳು ಭಾಗವಹಿಸಲು ತಿಳಿಸಬೇಕು. ಜಿಲ್ಲೆಯ ಅಂಗವಿಕಲರಿಗೆ ಸರ್ಕಾರದಿಂದ ನೀಡಲಾಗುವ ಸೌಲಭ್ಯಗಳು, ಅವರ ಸಮಸ್ಯೆಗಳು, ಇತ್ಯಾದಿಗಳನ್ನು ಇತ್ಯರ್ಥ ಪಡಿಸಲಾಗುವುದು. ಈ ಸಭೆಯನ್ನು ನಿಯಮಿತವಾಗಿ ಆಯೋಜಿಸದಿದ್ದರೆ ಅಧಿಕಾರಿಯನ್ನು ಅಮಾನತು ಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ADVERTISEMENT

ಬುದ್ಧಿಮಾಂದ್ಯ ಮಕ್ಕಳ ಪಿಂಚಣಿಯನ್ನು ₹800ರಿಂದ ₹ 1,400ಕ್ಕೆ ಹೆಚ್ಚಿಸಲಾಗಿದೆ. ಮಕ್ಕಳ ಪೋಷಣಾ ಭತ್ಯೆಯನ್ನು ₹ 2,00ಕ್ಕೆ ಹೆಚ್ಚಿಸಲಾಗಿದ್ದು, ಈ ಮೊತ್ತ ಅರ್ಹರಿಗೆ ಸಂದಾಯವಾಗುತ್ತಿರುವ ತಹಶೀಲ್ದಾರರಿಂದ ಖಾತ್ರಿ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಅಂಗವಿಕಲರ ಸಂಘದ ಅಧ್ಯಕ್ಷ ಮುರಳೀಧರ ನಾಯಕ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.