ADVERTISEMENT

ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ

ತೇಜಸ್ವಿ ಸೂರ್ಯರ ಕೋಮುವಾದಿ ಮನಸ್ಥಿತಿ: ಜೈನ್‌

​ಪ್ರಜಾವಾಣಿ ವಾರ್ತೆ
Published 8 ಮೇ 2021, 4:59 IST
Last Updated 8 ಮೇ 2021, 4:59 IST
ಬಿ.ಸಿ.ರೋಡಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಭಿಮಾನಿಗಳು ಮತ್ತು ಎಮ್ಮೆಕೆರೆ ಫ್ರೆಂಡ್ಸ್ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆಗೆ ಶುಕ್ರವಾರ ಚಾಲನೆ ನೀಡಿದರು. ಪ್ರಮುಖರಾದ ಬೇಬಿ ಕುಂದರ್, ಎಮ್ಮೆಕೆರೆ ಸಲಾಂ ಇದ್ದರು.
ಬಿ.ಸಿ.ರೋಡಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಅಭಿಮಾನಿಗಳು ಮತ್ತು ಎಮ್ಮೆಕೆರೆ ಫ್ರೆಂಡ್ಸ್ ವತಿಯಿಂದ ಉಚಿತ ಆಂಬುಲೆನ್ಸ್ ಸೇವೆಗೆ ಶುಕ್ರವಾರ ಚಾಲನೆ ನೀಡಿದರು. ಪ್ರಮುಖರಾದ ಬೇಬಿ ಕುಂದರ್, ಎಮ್ಮೆಕೆರೆ ಸಲಾಂ ಇದ್ದರು.   

ಮಂಗಳೂರು: ಇಂತಹ ಕಠಿಣ ಪರಿಸ್ಥಿತಿಯಲ್ಲಿ ಜನಸಾಮಾನ್ಯರು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಸಂಸದ ತೇಜಸ್ವಿ ಸೂರ್ಯ ತಮ್ಮ ಕೋಮುವಾದಿ ಮನೋಸ್ಥಿತಿಯಿಂದ ಬೆಡ್‌ ಬ್ಲಾಕಿಂಗ್‌ ಹಗರಣದ ಸಂದರ್ಭದಲ್ಲಿ ಆರೋಪಿಯ ಜೊತೆ ಕುಳಿತುಕೊಂಡು ಸಮಾಜವನ್ನು ಒಡೆಯುವ ಕೋಮು ಪ್ರಚೋದನೆಯ ಹೇಳಿಕೆ ನೀಡಿರುವುದು ಖಂಡನೀಯ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೇಜಸ್ವಿ ಸೂರ್ಯ ಬಿಬಿಎಂಪಿಯ ವಾರ್ ರೂಂನಲ್ಲಿ ಇರುವ 206 ಮಂದಿಯಲ್ಲಿ ಕೇವಲ ಮುಸ್ಲಿಂ ಸಮುದಾಯದ 17 ಜನರ ಹೆಸರನ್ನು ಉಲ್ಲೇಖಿಸಿ ತಮ್ಮ ಕೋಮು ದ್ವೇಷದ ಮನೋಭಾವವನ್ನು ವ್ಯಕ್ತಪಡಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಮಾನ ಎಸಗಿದ್ದಾರೆ ಎಂದರು.

ನೆಹರೂ ಅವರ ಪಂಚ ವಾರ್ಷಿಕ ಯೋಜನೆ, ಇಂದಿರಾ ಗಾಂಧಿಯವರ ಬ್ಯಾಂಕ್ ರಾಷ್ಟ್ರೀಕರಣ ನೀತಿ ದೇಶದ ಆರ್ಥಿಕ ಸ್ಥಿತಿಯನ್ನು ಉತ್ತಮಗೊಳಿಸಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ದೇಶದ ರೈತರ ₹80 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಾರೆ. ಸದ್ಯ ದೇಶದಲ್ಲಿ ಜನ ಸಂಕಷ್ಟದಲ್ಲಿರುವಾಗ ಸರ್ಕಾರವು ಜನರಿಗೆ ನೆರವು ನೀಡಲು ಮುಂದಾಗಬೇಕು ಎಂದು ಆಗ್ರಹಿಸಿದರು.

ADVERTISEMENT

ಕ್ರಿಮಿನಲ್ ಪ್ರಕರಣ ದಾಖಲಿಸಿ:ಸಮಾಜದಲ್ಲಿ ಕೋಮು ಪ್ರಚೋದನೆ ಉಂಟು ಮಾಡುವ ಹೇಳಿಕೆ ನೀಡಿರುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸ್ವಯಂಪ್ರೇರಿತರಾಗಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮಿಥುನ್ ರೈ ಒತ್ತಾಯಿಸಿದರು.

ಮುಖಂಡರಾದ ಮಹಾಬಲ ಮಾರ್ಲ, ಪ್ರವೀಣ್ ಚಂದ್ರ ಆಳ್ವ, ವಿನಯರಾಜ್, ಅನಿಲ್, ಪ್ರಕಾಶ್ ಸಾಲ್ಯಾನ್, ವಿಶ್ವಾಸ್ ದಾಸ್, ಸಂತೋಷ್ ಶೆಟ್ಟಿ, ಮೆರಿಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.