ADVERTISEMENT

ಫೇಸ್‌ಬುಕ್‌ ಖಾತೆ ಹ್ಯಾಕಿಂಗ್‌ ಜಾಲ: ಹೈಕೋರ್ಟ್‌ ಶಂಕೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2023, 6:40 IST
Last Updated 28 ಜೂನ್ 2023, 6:40 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಫೇಸ್‌ಬುಕ್‌ ಖಾತೆಗಳನ್ನು ಹ್ಯಾಕ್‌ ಮಾಡಿ ಅವಹೇಳನಕಾರಿ ಮತ್ತು ನಿಂದನಾತ್ಮಕ ಬರಹಗಳನ್ನು ಬಿತ್ತರಿಸುವ ಪ್ರಕರಣಗಳ ಹಿಂದೆ ದೊಡ್ಡ ಜಾಲವೇ ಕೆಲಸ ಮಾಡುತ್ತಿರುವಂತಿದೆ’ ಎಂದು ಹೈಕೋರ್ಟ್‌ ಬಲವಾದ ಶಂಕೆ ವ್ಯಕ್ತಪಡಿಸಿದೆ.

’ಧರ್ಮನಿಂದನೆ ಆರೋಪದಡಿ ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಮಂಗಳೂರಿನ ನಿವಾಸಿ ಜನಾರ್ದನ ಸಾಲಿಯಾನ ಶೈಲೇಶ್‌ ಕುಮಾರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈತನಕ ಕೈಗೊಂಡಿರುವ ಕ್ರಮಗಳ ಕುರಿತಂತೆ ವರದಿ ಸಲ್ಲಿಸಬೇಕು‘ ಎಂದು ನಿರ್ದೇಶನ ನೀಡಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ’ನಕಲಿ ಫೇಸ್‌ಬುಕ್‌ ಖಾತೆ ತೆರೆದು ಅಭಿಪ್ರಾಯ, ಟೀಕೆ–ಟಿಪ್ಪಣಿ ಬಿತ್ತರಿಸುವಂತಹ ಆರೋಪಗಳ ಬಗ್ಗೆ ಸೈಬರ್‌ ಪೊಲೀಸರು ಹೆಚ್ಚಿನ ನಿಗಾ ವಹಿಸಿ ಅಪರಾಧಿಗಳನ್ನು ಪತ್ತೆ ಹಚ್ಚಬೇಕು‘ ಎಂದು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿತು.

ಮಂಗಳೂರಿನ ಬಿಕರ್ನಕಟ್ಟೆ ನಿವಾಸಿಯಾದ ಜನಾರ್ದನ ಸಾಲಿಯಾನ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಪೀಠವು ಮಂಗಳವಾರ ವಿಚಾರಣೆ  ನಡೆಸಿತು. ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ವಕೀಲ ಮಧುಕರ ದೇಶಪಾಂಡೆ, ’ಪ್ರಕರಣಕ್ಕೆ ಸಂಬಂಧಿಸಿದಂತೆ ಸೌದಿ ಅರೇಬಿಯಾದ ವಿದೇಶಾಂಗ ಇಲಾಖೆಯೊಂದಿಗೆ ವಿಸ್ತೃತ ಪತ್ರ ವ್ಯವಹಾರ ನಡೆಸಲಾಗಿದೆ‘ ಎಂದರು.

ADVERTISEMENT

ಇದಕ್ಕೆ ನ್ಯಾಯಪೀಠವು, ’ಕೇವಲ ಪತ್ರ ವ್ಯವಹಾರ ನಡೆಸಿದರೆ ಸಾಲದು. ನಮ್ಮ ಪೊಲೀಸರು ಸ್ಕಾಟ್ಲೆಂಡ್‌ ಮತ್ತು ಮೊಸಾದ್‌ ಪೊಲೀಸರ ಚಾಣಾಕ್ಷತೆ, ಕೌಶಲವನ್ನು ಪ್ರದರ್ಶಿಸಬೇಕು. ನಮ್ಮ ದೇಶದ ಪ್ರಜೆಯೊಬ್ಬ ವಿದೇಶದಲ್ಲಿ ಅಪಾಯದಲ್ಲಿ ಸಿಲುಕಿದ್ದಾನೆ ಎಂದಾಗ ರಾಜ್ಯದ ಅತ್ಯುನ್ನತ ಕೋರ್ಟ್‌ ಎನಿಸಿದ ಹೈಕೋರ್ಟ್‌ ಆ ಕುರಿತು ಕಾಳಜಿ ವಹಿಸಿದೆ ಎಂಬುದು ವಿದೇಶೀಯರ ಗಮನಕ್ಕೂ ಬರಬೇಕು. ಜನಾರ್ದನ ಅವರ ಜೀವಕ್ಕೆ ಯಾವುದೇ ಅಪಾಯವಾಗದಂತೆ ನೋಡಿಕೊಳ್ಳಲು ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿ‘ ಎಂದು ಕೇಂದ್ರಕ್ಕೆ ನಿರ್ದೇಶಿಸಿತು.

ರಾಜ್ಯ ಸರ್ಕಾರದ ಪರ ವಕೀಲೆ ಶ್ವೇತಾ ಕೃಷ್ಣಪ್ಪ, ’ಫೇಸ್‌ ಬುಕ್‌ ಖಾತೆ ಹ್ಯಾಕ್‌ ಆಗಿರುವುದರ ಬಗ್ಗೆ ಬೆಂಗಳೂರಿನ ಸೈಬರ್ ಅಪರಾಧ ವಿಭಾಗದ ಪೊಲೀಸರು ತನಿಖೆ ಮುಂದುವರಿಸಿದ್ದಾರೆ‘ ಎಂದು ವಿವರ ನೀಡಿದರು.  ಪ್ರಕರಣವನ್ನು ಜುಲೈ 17ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.