ADVERTISEMENT

ನಕಲಿ ದಾಖಲೆ ಸೃಷ್ಟಿಸಿ ವಂಚನೆ:ನಾಲ್ವರು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2019, 11:34 IST
Last Updated 25 ಆಗಸ್ಟ್ 2019, 11:34 IST
ಬಂಧಿತ ಆರೋಪಿಗಳು.
ಬಂಧಿತ ಆರೋಪಿಗಳು.   

ಮಂಗಳೂರು: ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ವಂಚಿಸುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿರುವ ಮಂಗಳೂರು ಉತ್ತರ ಉಪ ವಿಭಾಗದ ರೌಡಿ ನಿಗ್ರಹ ದಳ ಹಾಗೂ ಆರ್ಥಿ ಅಪರಾಧ ಮತ್ತು ಮಾದಕವಸ್ತು ಅಪರಾಧ ನಿಯಂತ್ರಣ (ಇ ಅಂಡ್‌ ಎನ್‌ಸಿ) ಠಾಣೆ ಪೊಲೀಸರು, ನಾಲ್ವರನ್ನು ಬಂಧಿಸಿದ್ದಾರೆ.

ಪಾಂಡೇಶ್ವರದ ಮಂಗಳಾದೇವಿ ದೇವಸ್ಥಾನದ ಬಳಿಯ ನಿವಾಸಿ ಗೋವರ್ಧನ್‌ (34), ಬಜ್ಪೆ ಭಟ್ರಕೆರೆ ನಿವಾಸಿ ಮುಹಮ್ಮದ್ ಅನ್ವರ್‌ ಅಲಿಯಾಸ್‌ ಭಸ್ಮ ಅನ್ವರ್ (44), ಬಂಟ್ವಾಳ ತಾಲ್ಲೂಕಿನ ತುಂಬೆ ನಿವಾಸಿ ನೌಷಾದ್‌ ಅಲಿಯಾಸ್‌ ನೌಷಾದ್‌ ಹುಸೈನ್‌ (36) ಮತ್ತು ಮಂಗಳೂರಿನ ಕದ್ರಿ ಶಿವಭಾಗ್‌ ನಿವಾಸಿ ಉಮರ್ ಫಾರೂಕ್‌ ಅಲಿಯಾಸ್‌ ಆರ್‌ಟಿಒ ಉಮರ್‌ (51) ಬಂಧಿತ ಆರೋಪಿಗಳು.

ಆರೋಪಿಗಳು ವಾಹನ ಮಾಲೀಕರ ಗಮನಕ್ಕೆ ಬಾರದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದರು. ಒಂದೇ ವಾಹನದ ಹೆಸರಿನಲ್ಲಿ ಹಲವು ನಕಲಿ ದಾಖಲೆಗಳನ್ನು ಸೃಷ್ಟಿಸಿ, ಹಲವು ಬ್ಯಾಂಕ್‌ಗಳಲ್ಲಿ ಸಾಲ ಪಡೆಯುತ್ತಿದ್ದರು. ಸಾಲದ ಮೊತ್ತವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಳ್ಳುತ್ತಿದ್ದರು. ಅದನ್ನು ನಾಲ್ವರೂ ಹಂಚಿಕೊಳ್ಳುತ್ತಿದ್ದರು. ಈ ರೀತಿ ₹ 45 ಲಕ್ಷವನ್ನು ವಿವಿಧ ಬ್ಯಾಂಕ್‌ಗಳಿಗೆ ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀನಿವಾಸ ಆರ್‌. ಗೌಡ ನೇತೃತ್ವದ ತಂಡ ಈ ಜಾಲವನ್ನು ಪತ್ತೆಹಚ್ಚಿದೆ.

ADVERTISEMENT

ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಡಾ.ಪಿ.ಎಸ್‌.ಹರ್ಷ, ಡಿಸಿಪಿಗಳಾದ ಅರುಣಾಂಗ್ಷು ಗಿರಿ ಮತ್ತು ಲಕ್ಷ್ಮೀಗಣೇಶ್‌ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಶ್ರೀನಿವಾಸ ಗೌಡ ಅವರೊಂದಿಗೆ ಇ ಅಂಡ್‌ ಎನ್‌ಸಿ ಠಾಣೆ ಇನ್‌ಸ್ಪೆಕ್ಟರ್‌ ರಾಮಕೃಷ್ಣ, ಉತ್ತರ ಉಪ ವಿಭಾಗದ ರೌಡಿ ನಿಗ್ರಹ ದಳದ ಮುಹಮ್ಮದ್, ಕುಶಲ ಮಣಿಯಾಣಿ, ಸತೀಶ್ ಎಂ., ವಿಜಯ ಕಾಂಚನ್, ಇಸಾಕ್, ಶರಣ್ ಕಾಳಿ ಮತ್ತು ಇ ಆ್ಯಂಡ್ ಎನ್‍ಸಿ ಠಾಣೆ ಸಿಬ್ಬಂದಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.