ಬೆಳ್ತಂಗಡಿ: ತಾಲ್ಲೂಕಿನಲ್ಲಿ ಬುಧವಾರ ಉತ್ತಮ ಮಳೆ ಸುರಿದಿದೆ. ಬೆಳಿಗ್ಗೆ 6 ಗಂಟೆಗೆ ಆರಂಭವಾದ ಮಳೆ ಮಧ್ಯಾಹ್ನ 1 ಗಂಟೆವರೆಗೆ ಸುರಿಯಿತು. ಮಧ್ಯಾಹ್ನ ಬಿಡುವು ನೀಡಿ, ಸಂಜೆ 4 ಗಂಟೆಯಿಂದ ಮತ್ತೆ ಮುಂದುವರಿಯಿತು.
ಧರ್ಮಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೇತ್ರಾವತಿ- ಅಜೆಕುರಿ ರಸ್ತೆ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.ಮರ ಬಿದ್ದು ನಾಲ್ಕು ವಿದ್ಯುತ್ ಕಂಬಗಳು ಮುರಿದಿವೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆ ಭಾಗಶಃ ಕುಸಿದಿದೆ. ಪಡಂಗಡಿ ಗ್ರಾಮದ ಪೆರಣಮಂಜ ಬಳಿ ಮಹಮ್ಮದ್ ಎಂಬುವರ ಮನೆಯ ಆವರಣಗೋಡೆ ಕುಸಿದಿದೆ.
ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೂ ಮಳೆ ಅಡ್ಡಿಯಾಯಿತು. ತಾಲ್ಲೂಕಿನಲ್ಲಿ ಕೃಷಿಕರು ಮಳೆಗಾಲದ ಅಗತ್ಯ ಕೆಲಸಗಳನ್ನು ನಡೆಸುವ ತಯಾರಿಯಲ್ಲಿ ತೊಡಗಿದ್ದಾರೆ.
ನೇತ್ರಾವತಿ, ಮೃತ್ಯುಂಜಯ ನದಿಯಲ್ಲಿ ನೀರಿನ ಹರಿವು ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಿದೆ. ಹಲವೆಡೆ ಕಿಂಡಿ ಅಣೆಕಟ್ಟುಗಳ ಹಲಗೆ ತೆರವು ಕೆಲಸ ಬಾಕಿ ಇದೆ. ಸದ್ಯ ನೀರು ರಭಸವಾಗಿ ಹರಿಯುತ್ತಿದ್ದು ಕಿಂಡಿ ಅಣೆಕಟ್ಟುಗಳ ಹಲಗೆ ತೆರವುಗೊಳಿಸುವುದು ಸವಾಲಿನ ಕೆಲಸವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.