ADVERTISEMENT

ಕರಾವಳಿಯಲ್ಲಿ ಭಾರಿ ಮಳೆ ಮುನ್ನೆಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 14:06 IST
Last Updated 9 ಜುಲೈ 2019, 14:06 IST

ಮಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ ಬೀಳಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮಂಗಳವಾರದಿಂದ ಗುರುವಾರದವರೆಗೆ ಕರಾವಳಿಯಲ್ಲಿ ಭಾರಿ ಮಳೆ ಸುರಿಯಲಿದೆ. ಮೊದಲ ದಿನ ಮಳೆಯ ತೀವ್ರತೆ ಹೆಚ್ಚಿರಲಿದೆ. ನಂತರದ ಎರಡು ದಿನಗಳ ಸ್ವಲ್ಪ ಕಡಿಮೆಯಾಗಲಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಮಂಗಳವಾರ ಮತ್ತು ಬುಧವಾರ ಭಾರಿ ಪ್ರಮಾಣದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ.

ಮಂಗಳೂರಿನಿಂದ ಕಾರವಾರದವರೆಗಿನ ಕಡಲ ತೀರದಲ್ಲಿ ಅಲೆಗಳ ಉಬ್ಬರ ಹೆಚ್ಚಿದ್ದು, ಬೃಹದಾಕಾರದ ಅಲೆಗಳು ದಡಕ್ಕೆ ಬಂದು ಅಪ್ಪಳಿಸುತ್ತಿವೆ. ಮಂಗಳವಾರ ಸಂಜೆ 5.30ರಿಂದ ಗುರುವಾರ ತಡರಾತ್ರಿಯವರೆಗೆ ಈ ಪ್ರದೇಶದಲ್ಲಿ 3.5 ಮೀಟರ್‌ನಿಂದ 4 ಮೀಟರ್‌ ಎತ್ತರದ ಅಲೆಗಳು ದಡಕ್ಕೆ ಅಪ್ಪಳಿಸಲಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಿರುವ ಮುನ್ನೆಚ್ಚರಿಕೆಯಲ್ಲಿ ಇಲಾಖೆ ಹೇಳಿದೆ.

ADVERTISEMENT

ಕರಾವಳಿಯಲ್ಲಿ ನೈರುತ್ಯ ದಿಕ್ಕಿಗೆ ಪ್ರತಿ ಗಂಟೆಗೆ 40ರಿಂದ 50 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸುತ್ತಿದೆ. ಮುಂದಿನ ಮೂರು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.