ಹೆಬ್ರಿ: ಇಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರವನ್ನು ಶೀಘ್ರದಲ್ಲಿ 100 ಹಾಸಿಗೆಯ ತಾಲ್ಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಾಗುತ್ತದೆ. ಈ ಬಗ್ಗೆ ಆರೋಗ್ಯ ಸಚಿವರಿಗೆ ಮನವಿ ಮಾಡಿದ್ದು ಆಗಸ್ಟ್ ತಿಂಗಳಿನಲ್ಲಿ ಆದೇಶವಾಗುವ ಸಾಧ್ಯತೆ ಇದೆ ಎಂದು ಶಾಸಕ ಸುನೀಲ್ ಕುಮಾರ್ ಹೇಳಿದರು.
ಮುದ್ರಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಕಾರ್ಯಕ್ರಮಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಕಾರ್ಕಳ ಕ್ಷೇತ್ರದಲ್ಲಿ ಅಂತರ್ಜಲದ ಮಟ್ಟ ಏರಿಸಲು ಕೆರೆಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಮುದ್ರಾಡಿಯ ಮದಗವನ್ನು ಅಭಿವೃದ್ಧಿಪಡಿಸಲಾಗುವುದು. ಕಬ್ಬಿನಾಲೆಯ ಮೇಲ್ಮಠ ರಸ್ತೆಗೆ ₹ 60 ಲಕ್ಷ ಮತ್ತು ಮುದ್ರಾಡಿಯ ಜರ್ವತ್ತು ರಸ್ತೆಗೆ ₹ 10 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ಕಾಮಗಾರಿ ನಡೆಯಲಿದೆ ಎಂದರು.
ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮಾತನಾಡಿ, ‘ಕಾರ್ಕಳ ಕ್ಷೇತ್ರಕ್ಕೆ ಪ್ರಾಧಿಕಾರದಿಂದ ₹ 4 ಕೋಟಿ ಅನುದಾನ ನೀಡಿದ್ದು, ಮುಂದೆ ಆದ್ಯತೆಯ ಮೇಲೆ ಹೆಚ್ಚಿನ ಅನುದಾನ ನೀಡಲಾಗುವುದು’ ಎಂದರು.
ಮುದ್ರಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ ಹೆಗ್ಡೆ, ಉಪಾಧ್ಯಕ್ಷೆ ವಸಂತಿ ಪೂಜಾರಿ, ಸದಸ್ಯರು, ಹೆಬ್ರಿ ತಹಶೀಲ್ದಾರ್ ಪುರಂದರ್ ಕೆ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ರಮೇಶ್ ಕುಮಾರ್ ಶಿವಪುರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ದಾನಿಗಳಾದ ಮುದ್ರಾಡಿ ಸುದೇಶ ಕಾಮತ್, ಹರಿಪ್ರಸಾದ ಶೆಟ್ಟಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸದಾಶಿವ ಸೇರ್ವೆಗಾರ್ ಭಾಗವಹಿಸಿದ್ದರು. ಕಾಪೋಳಿ ಶ್ರೀಧರ ಹೆಬ್ಬಾರ್ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.