ಬೆಂಗಳೂರು: ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಯೋಜನೆಯಡಿ ಕೈಗೊಂಡಿರುವ 34 ಕಾಮಗಾರಿಗಳಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯ ವಿಲೇವಾರಿ ಕುರಿತು ನಿಯಮ ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಈ ಕುರಿತು ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ತಾಜ್ಯ ವಿಲೇವಾರಿ ನಿಯಮ ಪಾಲಿಸದ ಪಾಲಿಕೆ ಆಯುಕ್ತರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತು. ‘ಡಿ. 23ರಂದು ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಾಗಿ ವಿವರಣೆ ನೀಡಬೇಕು’ ಪೀಠ ತಿಳಿಸಿತು.
‘ಸ್ಮಾರ್ಟ್ಸಿಟಿ ಯೋಜನೆಯಡಿ ಮಂಗಳೂರು ನಗರದಲ್ಲಿ 34 ಕಾಮಗಾರಿ ಕೈಗೊಳ್ಳಲಾಗಿದೆ. ಅವುಗಳಿಂದ ಉತ್ಪತ್ತಿ ಆಗಿರುವ ತಾಜ್ಯ ವಿಲೇವಾರಿಯಲ್ಲಿ ನಿಯಮಗಳ ಪಾಲನೆ ಆಗುತ್ತಿಲ್ಲ. ಕಾಮಗಾರಿ ಇರುವ ತ್ಯಾಜ್ಯವನ್ನೂ ತೆರವುಗೊಳಿಸಿಲ್ಲ. ಹೀಗಾಗಿ, ನಗರದಲ್ಲಿ ಜನ ಸಂಚಾರ ಮಾಡದ ಸ್ಥಿತಿ ಸೃಷ್ಟಿಯಾಗಿದೆ’ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದರು.
‘ನೀವು ಸ್ಮಾರ್ಟ್ ಆಗದೆ ನಗರವನ್ನು ಹೇಗೆ ಸ್ಮಾರ್ಟ್ ಮಾಡುತ್ತೀರಿ. 2016ರ ನಿಯಮದಂತೆ ತ್ಯಾಜ್ಯ ವಿಲೇವಾರಿಗೆ ಏಕೆ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಸ್ಮಾರ್ಟ್ಸಿಟಿ ನಿಗಮ ಮೌನವಾಗಿರುವುದು ಏಕೆ’ ಎಂದು ಪ್ರಶ್ನಿಸಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.