ADVERTISEMENT

ಹಿಂದೂ ಹೆಣ್ಣುಮಕ್ಕಳ ರಕ್ಷಣೆಗಾಗಿ ಮಾತೃ ಮಂಡಳಿ ಅಗತ್ಯ: ವಿಶ್ವಪ್ರಸನ್ನ ತೀರ್ಥ ಶ್ರೀ

‘ಹಿಂದೂ ಐಕ್ಯತಾ ಸಮಾವೇಶ’ದಲ್ಲಿ ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2021, 3:22 IST
Last Updated 22 ಮಾರ್ಚ್ 2021, 3:22 IST
ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ರಾಷ್ಟ್ರ ರಕ್ಷಣೆಯ ಸಂಕಲ್ಪಕ್ಕಾಗಿ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಭಾನುವಾರ ನಡೆದ ಬೃಹತ್ ‘ಹಿಂದೂ ಐಕ್ಯತಾ ಸಮಾವೇಶ’ದಲ್ಲಿ ವಿವಿಧ ಮಠಾಧೀಶರು ದೀಪ ಬೆಳಗಿದರು
ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ರಾಷ್ಟ್ರ ರಕ್ಷಣೆಯ ಸಂಕಲ್ಪಕ್ಕಾಗಿ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಭಾನುವಾರ ನಡೆದ ಬೃಹತ್ ‘ಹಿಂದೂ ಐಕ್ಯತಾ ಸಮಾವೇಶ’ದಲ್ಲಿ ವಿವಿಧ ಮಠಾಧೀಶರು ದೀಪ ಬೆಳಗಿದರು   

ಪುತ್ತೂರು: ‘ಹಿಂದೂ ಹೆಣ್ಣುಮಕ್ಕಳ ರಕ್ಷಣೆಗಾಗಿ ರಾಷ್ಟ್ರಮಟ್ಟದಲ್ಲಿ ಮಾತೃ ಮಂಡಳಿಯನ್ನು ರಚಿಸಬೇಕಾದ ಅಗತ್ಯವಿದೆ’ ಎಂದು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರು ಹೇಳಿದರು.

ಪುತ್ತೂರಿನ ಮಹತೋಭಾರ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯಲ್ಲಿ ರಾಷ್ಟ್ರ ರಕ್ಷಣೆಯ ಸಂಕಲ್ಪಕ್ಕಾಗಿ ಪುತ್ತೂರು ಹಿಂದೂ ಜಾಗರಣ ವೇದಿಕೆಯ ಆಶ್ರಯದಲ್ಲಿ ಭಾನುವಾರ ನಡೆದ ಬೃಹತ್ ‘ಹಿಂದು ಐಕ್ಯತಾ ಸಮಾವೇಶ’ದಲ್ಲಿ ಅವರು ಆಶೀರ್ವಚನ ನೀಡಿದರು.

‘ಸಹಸ್ರಾರು ವರ್ಷಗಳಿಂದಲೂ ಹಿಂದೂ ಸಮಾಜ ಹತ್ತು ಹಲವು ಸವಾಲುಗಳನ್ನು ಎದುರಿಸುತ್ತಾ ಬಂದಿದೆ. ಪ್ರಸ್ತುತ ಹಿಂದೂ ಸಮಾಜದ ಹೆಣ್ಣು ಮಕ್ಕಳನ್ನು ವಿವಿಧ ಆಸೆ ಆಮಿಷಗಳನ್ನೊಡ್ಡಿ ಅಪಹರಣ, ಮತಾಂತರ ಮಾಡುವ ಕೃತ್ಯಗಳನ್ನು ನಡೆಸಲಾಗುತ್ತಿದೆ’ ಎಂದರು.

ADVERTISEMENT

ದಿಕ್ಸೂಚಿ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ, ‘ಹಿಂದೂ ಯುವ ಜನಾಂಗ ರಾಜಕೀಯ, ಸಂಘಟನೆಗಳ ಹೆಸರಿನಲ್ಲಿ ಚದುರಿ ಹೋಗದೆ ಧರ್ಮದ ರಕ್ಷಣೆಗಾಗಿ ಸಂಘಟಿತರಾಗಬೇಕಾಗಿದೆ. ಇದಕ್ಕಾಗಿ ಸಂಘಟಿತ ಧ್ವನಿ ಮೂಡಿ ಬರಬೇಕಾಗಿದೆ’ ಎಂದರು.

ಒಡಿಯೂರು ಕ್ಷೇತ್ರದ ಗುರು ದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿ, ‘ಇಂದಿನ ಕಾಲಘಟ್ಟದಲ್ಲಿ ಹಿಂದೂ ಧರ್ಮದ ಮೇಲೆ ನಡೆಯುತ್ತಿರುವ ಪ್ರಹಾರಗಳನ್ನು ಸಮರ್ಥವಾಗಿ ಎದುರಿಸಬೇಕಾದರೆ. ಈ ನಿಟ್ಟಿನಲ್ಲಿ ಯುವ ಜನಾಂಗ ಎಚ್ಚೆತ್ತುಕೊಳ್ಳಬೇಕಾದುದು ಅತ್ಯಗತ್ಯ’ ಎಂದರು.

ವಜ್ರದೇಹಿ ಮಠದ ರಾಜಶೇಖ ರಾನಂದ ಸ್ವಾಮೀಜಿ, ಮಾಣಿಲ ಶ್ರೀಧಾಮ ಮಹಾಲಕ್ಷ್ಮಿ ಕ್ಷೇತ್ರದ ಮೋಹನದಾಸ ಪರಮಹಂಸ ಸ್ವಾಮೀಜಿ, ಕರಿಂಜೆ ಕ್ಷೇತ್ರದ ಮುಕ್ತಾನಂದ ಸ್ವಾಮೀಜಿ, ಕಣಿಯೂರು ಮಠದ ಮಹಾಬಲ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು.

ಕುಂಟಾರು ರವೀಶ ತಂತ್ರಿ ಅಧ್ಯಕ್ಷತೆ ವಹಿಸಿದ್ದರು. ಜಾಗರಣ ವೇದಿಕೆಯ ಕರ್ನಾಟಕ ಉತ್ತರ ಪ್ರಾಂತ ಕಾರ್ಯ ಕಾರಿಣಿ ಸದಸ್ಯ ಲಕ್ಷ್ಮಣ ನಿರಾಣಿ, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂ ಬಾಡಿ, ಬೆಂಗಳೂರಿನ ವಿದ್ಯಾಮಾನ ವಿದ್ಯಾ ಕೇಂದ್ರದ ನಿರ್ದೇಶಕ ಭರತ್ ಸೌಂದರ್ಯ, ಮಹಾಲಿಂಗೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಇದ್ದರು.

ಪುತ್ತೂರು ಹಿಂದೂ ಜಾಗರಣಾ ವೇದಿಕೆಯ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್, ಹಿಂದೂ ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಂಪರ್ಕ ಪ್ರಮುಖ್ ನರಸಿಂಹ ಮಾಣಿ, ಹಿಂದೂ ಜಾಗರಣ ವೇದಿಕೆಯ ಪುತ್ತೂರು ಜಿಲ್ಲಾ ಸಂಘಟನಾ ಪ್ರಮುಖ್ ಚಿನ್ಮಯ ಈಶ್ವರಮಂಗಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ, ನಗರ ಅಧ್ಯಕ್ಷ ಪುಷ್ಪರಾಜ್ ದರ್ಬೆ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರಕಟ್ಟೆ ಇದ್ದರು.

ಹಿಂದು ಜಾಗರಣ ವೇದಿಕೆಯ ಪ್ರಾಂತ್ಯ ಕಾರ್ಯದರ್ಶಿ ರಾಧಾಕೃಷ್ಣ ಅಡ್ಯಂತಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತೂರು ತಾಲ್ಲೂಕು ಅಧ್ಯಕ್ಷ ಅಶೋಕ್ ತ್ಯಾಗರಾಜನಗರ ಸ್ವಾಗತಿಸಿದರು. ನವೀನ್ ಕುಲಾಲ್ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.