
ಪುತ್ತೂರು: ತಾಲ್ಲೂಕಿನ ಬಲ್ನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪಳ-ಹಸಂತಡ್ಕ ಸಾರ್ವಜನಿಕ ಸಂಪರ್ಕ ರಸ್ತೆ ಬದಿಯನ್ನು ಅತಿಕ್ರಮಿಸಿ ವ್ಯಕ್ತಿಯೊಬ್ಬರು ನಿರ್ಮಿಸಿದ್ದ ಬೇಲಿಯ ತೆರವು ಕಾರ್ಯಾಚರಣೆ ಪುತ್ತೂರು ತಾಲ್ಲೂಕು ಪಂಚಾಯಿತಿ ಮತ್ತು ಬಲ್ನಾಡು ಗ್ರಾಮ ಪಂಚಾಯಿತಿಯ ನೇತೃತ್ವದಲ್ಲಿ ಪೊಲೀಸರ ಸಹಕಾರದೊಂದಿಗೆ ನಡೆಯಿತು.
ಕೊಪ್ಪಳ-ಹಸಂತಡ್ಕ ರಸ್ತೆಯ ಒಂದು ಬದಿಗೆ ಅಲ್ಲಿನ ವ್ಯಕ್ತಿಯೊಬ್ಬರು ಮರದ ಕಂಬಗಳನ್ನು ಅಳವಡಿಸಿ ಬೇಲಿ ನಿರ್ಮಿಸಿ ರಸ್ತೆಯನ್ನು ಅತಿಕ್ರಮಿಸಲು ಮುಂದಾಗಿರುವುದಾಗಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ದೂರು ಸಲ್ಲಿಸಿದ್ದರು. ಗ್ರಾಮ ಪಂಚಾಯಿತಿ ವತಿಯಿಂದ ಬೇಲಿ ಹಾಕಿದ ವ್ಯಕ್ತಿಗೆ ನೋಟಿಸ್ ನೀಡಿ, ಬೇಲಿಯನ್ನು ತೆರವುಗೊಳಿಸುವಂತೆ ಸೂಚಿಸಲಾಗಿತ್ತು. ಆದರೆ, ಅವರು ಬೇಲಿ ತೆರವುಗೊಳಿಸಿರಲಿಲ್ಲ. ಈ ಬಗ್ಗೆ ಗ್ರಾಮ ಪಂಚಾಯಿತಿಯಿಂದ ತಾಲ್ಲೂಕು ಪಂಚಾಯಿತಿಗೆ ಮನವಿ ಸಲ್ಲಿಸಲಾಗಿತ್ತು.
ರಸ್ತೆಯನ್ನು ಅತಿಕ್ರಮಿಸಿಕೊಂಡು ಅಳವಡಿಸಲಾದ ಬೇಲಿಯನ್ನು ತೆರವುಗೊಳಿಸುವ ಕಾರ್ಯಾಚರಣೆಯು ತಾ.ಪಂ ಸಹಾಯಕ ನಿರ್ದೇಶಕ ವಿಲ್ಫ್ರೆಡ್ ರಾಡ್ರಿಗಸ್ ಅವರ ನೇತೃತ್ವದಲ್ಲಿ ಸಂಪ್ಯ ಠಾಣೆಯ ಪೊಲೀಸರ ಸಹಕಾರದೊಂದಿಗೆ ಬಲ್ನಾಡು ಗ್ರಾಮ ಪಂಚಾಯಿತಿ ವತಿಯಿಂದ ನಡೆಯಿತು.
ತಾಲ್ಲೂಕು ಪಂಚಾಯಿತಿ ಅಧಿಕಾರಿ ಭರತ್, ಬಲ್ನಾಡು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪರಮೇಶ್ವರಿ ಬಿ.ಆರ್., ಉಪಾಧ್ಯಕ್ಷ ರವಿಚಂದ್ರ, ಸದಸ್ಯೆ ವಸಂತಿ, ಅಭಿವೃದ್ಧಿ ಅಧಿಕಾರಿ ದೇವಪ್ಪ ಪಿ.ಆರ್., ಕಾರ್ಯದರ್ಶಿ ಲಕ್ಷ್ಮೀ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.