ಮಂಗಳೂರು: ಕೋವಿಡ್–19 ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಕಾರಣದಿಂದ ಈ ಬಾರಿಯ ಜಿಲ್ಲಾ ಮಟ್ಟದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಗರದ ನೆಹರೂ ಮೈದಾನದಲ್ಲಿ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಸಂಖ್ಯೆಯ ಜನರು ಸಮಾರಂಭದಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ’ ಎಂದರು.
ಸಾರ್ವಜನಿಕರು ತಮ್ಮ ಮನೆಗಳಲ್ಲೇ ಇದ್ದು ದೇಶಭಕ್ತಿಯನ್ನು ವ್ಯಕ್ತಪಡಿಸಬೇಕು. ಸಾಮಾಜಿಕ ಜಾಲತಾಣಗಳ ಮೂಲಕ ಜಿಲ್ಲಾ ಮಟ್ಟದ ಸಮಾರಂಭದ ನೇರ ಪ್ರಸಾರ ಮಾಡಲಾಗುವುದು. ನಗರದ ಪ್ರಮುಖ ವೃತ್ತವೊಂದರಲ್ಲಿ ಡಿಜಿಟಲ್ ಪರದೆಯಲ್ಲಿ ಸಮಾರಂಭದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಸ್ವಾತಂತ್ರ್ಯ ದಿನ ಆಚರಿಸುವ ಸಂದರ್ಭದಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಗುಂಪುಗೂಡಿ ಸಮಾರಂಭ ನಡೆಸಬಾರದು. ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಧಾರಣೆ ಕಡ್ಡಾಯ ಎಂದರು.
ಸನ್ಮಾನಕ್ಕೆ ಸಿದ್ಧತೆ:ಕೋವಿಡ್ ಸೋಂಕು ವ್ಯಾಪಿಸುತ್ತಿರುವ ಸಂಕಷ್ಟದ ದಿನಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಸ್ವಚ್ಛತಾ ಕಾರ್ಮಿಕರು, ಪೊಲೀಸರು ಮತ್ತು ವೈದ್ಯರನ್ನು ಗುರುತಿಸಿ, ಸ್ವಾತಂತ್ರ್ಯ ದಿನಾಚರಣೆ ವೇಳೆ ಸನ್ಮಾನ ಮಾಡುವ ಯೋಜನೆಯನ್ನು ಜಿಲ್ಲಾಡಳಿತ ರೂಪಿಸಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರೂಪಾ ಎಂ.ಜೆ. ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.