ಮೂಡುಬಿದಿರೆ: ‘ದೇಸಿ ಕ್ರೀಡೆ ಕೊಕ್ಕೊ ಎಲ್ಲಾ ಕ್ರೀಡೆಗಳಿಗೆ ಅಡಿಪಾಯ ಇದ್ದಂತೆ. ಈ ಕ್ರೀಡೆಯನ್ನು ಪ್ರೋತ್ಸಾಹಿಸುವ ಮೂಲಕ, ಯುವಜನರಲ್ಲಿ ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಹೆಚ್ಚಿಸಲು ಸಾಧ್ಯ’ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಜೆರಾಲ್ಡ್ ಡಿಸೋಜಾ ಹೇಳಿದರು.
ಮಂಗಳವಾರ ಇಲ್ಲಿ ಮಂಗಳೂರು ವಿವಿ ಮತ್ತು ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಅಂತರ್ ಕಾಲೇಜು ಪುರುಷ ಮತ್ತು ಮಹಿಳೆಯರ ಕೊಕ್ಕೋ ಟೂರ್ನಿ -2025 ಉದ್ಘಾಟಿಸಿ ಅವರು ಮಾತನಾಡಿದರು.
ಆಳ್ವಾಸ್ ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿವೇಕ ಆಳ್ವ ಮಾತನಾಡಿ, ‘ಹಿಂದೆ ಕೊಕ್ಕೊ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸೀಮಿತವಾಗಿತ್ತು. ಆದರೆ, ಈಗ ಈ ದೇಸಿ ಕ್ರೀಡೆಗೆ ರಾಷ್ಟ್ರಮಟ್ಟದಲ್ಲಿ ಮನ್ನಣೆ ಲಭಿಸುತ್ತಿದೆ’ ಎಂದರು.
ಕೊಕ್ಕೊದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಮರಿಯಪ್ಪ, ದಿವ್ಯ ಕೆ.ಆರ್ ಮತ್ತು ನಿಖಿಲ್ ಬಿ. ಅವರನ್ನು ಗೌರವಿಸಲಾಯಿತು.
ಮಂಗಳೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಪ್ರಸನ್ನ ಕುಮಾರ್ ಬಿ.ಕೆ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಧು ಜಿ.ಆರ್ ಇದ್ದರು.
ಟೂರ್ನಿಯಲ್ಲಿ ಪುರುಷರ ಮತ್ತು ಮಹಿಳೆಯರ ವಿಭಾಗದಿಂದ ತಲಾ18 ತಂಡಗಳು ಭಾಗವಹಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.