ಬಂಟ್ವಾಳ: ತಾಲ್ಲೂಕಿನ ಎಲಿಯನಡು ಗೋಡು ಮತ್ತು ಬೆಳ್ತಂಗಡಿ ತಾಲ್ಲೂಕಿನ ಆರಂಬೋಡಿ ಗ್ರಾಮದ ಗಡಿ ಭಾಗದ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಬಯಲು ಕಂಬಳ ಡಿ. 5 ರಂದು ನಡೆಯಲಿದೆ.
ಇಲ್ಲಿನ ಮಹಿಷಮರ್ದಿನಿ ಕಂಬಳ ಸಮಿತಿ ವತಿಯಿಂದ ನಡೆಯುತ್ತಿರುವ ಕಂಬಳವು ಪ್ರಸಕ್ತ ವರ್ಷದ ಪ್ರಥಮ ಕಂಬಳ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಸ್ಥಳೀಯ ಪೂಂಜ ಪಂಚದುರ್ಗಾ ಪರಮೇಶ್ವರಿ ದೇವಸ್ಥಾನ ಮತ್ತು ಹೊಕ್ಕಾಡಿಗೋಳಿ ಕಂಬಳಕ್ಕೆ ಧಾರ್ಮಿಕ ನಂಟು ಇದೆ.
ಇದೇ 5 ರಂದು ಬೆಳಿಗ್ಗೆ 7 ಕ್ಕೆ ಪೂಂಜ ಕ್ಷೇತ್ರದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಕಂಬಳ ಉದ್ಘಾಟಿಸಲಿದ್ದಾರೆ. ಪ್ರಧಾನ ಅರ್ಚಕ ಪ್ರಕಾಶ್ ಆಚಾರ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲು ಉದ್ಘಾಟಿಸುವರು. ಸಚಿವರಾದ ಆರಗ ಜ್ಞಾನೇಂದ್ರ, ಆನಂದ ಸಿಂಗ್, ವಿ.ಸುನಿಲ್ ಕುಮಾರ್, ಎಸ್.ಅಂಗಾರ, ಬೆಳ್ತಂಗಡಿ ಶಾಸಕ ಹರೀಶ ಪೂಂಜ, ಚಲನಚಿತ್ರ ನಿರ್ದೆಶಕ ರಾಜೇಂದ್ರ ಸಿಂಗ್ ಬಾಬು ಪಾಲ್ಗೊಳ್ಳಲಿದ್ದಾರೆ.
ಈ ಬಾರಿ ಒಟ್ಟು 125 ಕ್ಕೂ ಹೆಚ್ಚು ಜೋಡಿ ಓಟದ ಕೋಣ ಭಾಗವಹಿಸುವ ನಿರೀಕ್ಷೆ ಇದೆ. ಜಿಲ್ಲಾ ಕಂಬಳ ಸಮಿತಿ ಮಾರ್ಗದರ್ಶನದಲ್ಲಿ ಅಹಿಂಸಾತ್ಮಕ ಮತ್ತು ಕೋವಿಡ್ ನಿಯಮಾವಳಿ ಪಾಲಿಸಿಕೊಂಡು ಕಂಬಳ ನಡೆಸಲಾಗುತ್ತದೆ ಎಂದು ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.