ಪುತ್ತೂರು: ‘ರಾಜ್ಯದ ನಾನಾ ವಸತಿಯುತ ಶಾಲೆಗಳಿಗೆ ಪ್ರವಾಸ ಮಾಡಿದ ಸಂದರ್ಭದಲ್ಲಿ ಹೆಣ್ಮಕ್ಕಳ ಸ್ವ-ರಕ್ಷಣೆಗೆ ಕರಾಟೆ ಕಲಿಕೆ ಪ್ರಯೋಜನ ಆಗಿರುವುದು ಗಮನಕ್ಕೆ ಬಂದಿದೆ. ಹೀಗಾಗಿ, ಇದನ್ನು ವಿಸ್ತರಿಸುವ ಯೋಚನೆ ಮಾಡಲಾಗಿದೆ. ಇದಕ್ಕಾಗಿ 1 ಸಾವಿರ ಕರಾಟೆ ಶಿಕ್ಷಕರನ್ನು ನಿಯೋಜಿಸುವ ಚಿಂತನೆಯು ಇದೆ’ ಎಂದು ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಪುತ್ತೂರು ನಗರದ ಹೊರವಲಯದ ಸಾಲ್ಮರದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಆಶ್ರಯದಲ್ಲಿ ₹ 1 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಡಿ.ದೇವರಾಜ ಅರಸು ಭವನವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
‘ರಾಜ್ಯ ಸರ್ಕಾರವು ಈ ಬಾರಿ ದೀನ್ ದಯಾಳ್ ಉಪಾಧ್ಯಾಯ ಹೆಸರಿನಲ್ಲಿ 1 ಸಾವಿರ ವಿದ್ಯಾರ್ಥಿಗಳ ಸಾಮರ್ಥ್ಯದ ಐದು ವಸತಿಯುತ ಶಾಲೆ ತೆರೆಯಲಿದೆ. ಅಲ್ಲಿ ಎಲ್ಲ ಜಾತಿ, ಮತ, ಧರ್ಮದ ವಿದ್ಯಾರ್ಥಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಹಿಂದೆ ಅಲ್ಪಸಂಖ್ಯಾತರು, ಬಹು ಸಂಖ್ಯಾತರು ಎಂದು ಪ್ರತ್ಯೇಕಗೊಳಿಸಿದ್ದರಿಂದ ಈಗ ಅದರ ಸವಾಲು ಎದುರಾಗಿದೆ. ಹಾಗಾಗಿ, ಎಲ್ಲ ವರ್ಗದವರಿಗೂ ಇಲ್ಲಿ ಪ್ರವೇಶಕ್ಕೆ ಆದ್ಯತೆ ನೀಡಲಾಗುವುದು’ ಎಂದು ಸಚಿವರು ಹೇಳಿದರು.
ಶಾಸಕ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸದಸ್ಯ ಪದ್ಮನಾಭ ನಾಯ್ಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ, ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಎಂ, ತಹಶೀಲ್ದಾರ್ ಟಿ.ರಮೇಶ್ ಬಾಬು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ, ನಗರಸಭೆ ಪೌರಾಯುಕ್ತ ಮಧು.ಎಸ್.ಮನೋಹರ್, ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಭಾವಿ ಇದ್ದರು.
ಶೈಕ್ಷಣಿಕ ಸಾಧನೆಗಾಗಿ ಕಾವ್ಯಶ್ರೀ, ಪ್ರತೀಕ್ಷಾ, ಶ್ರದ್ಧಾ ರೈ ಅವರನ್ನು ಸನ್ಮಾನಿಸಲಾಯಿತು. ಹಿಂದುಳಿದ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಎಸ್.ಆರ್. ಸ್ವಾಗತಿಸಿದರು. ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾ ಧಿಕಾರಿ ರಾಜ್ಗೋಪಾಲ್ ಎನ್.ಎನ್. ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಳ್ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.