ಬಂಟ್ವಾಳ: ದೇಶದಲ್ಲಿ ಹಿಂದೂ, ಮುಸ್ಲಿಂ, ಕ್ರೈಸ್ತರು ಒಟ್ಟಾಗಿ ದೇಶವನ್ನು ರಕ್ಷಿಸುವ ಅಗತ್ಯವಿದೆ. ಬಿಹಾರದಲ್ಲಿ ಸೋಲುವ ಭೀತಿಯಿಂದ ₹ 1.50 ಲಕ್ಷ ಕೋಟಿ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಪಾಕಿಸ್ತಾನ, ಮುಸಲ್ಮಾನ ಮತ್ತು ಅಫ್ಘಾನಿಸ್ತಾನ ಮಾತ್ರ ಮತ ಗಳಿಕೆಗೆ ಮೂಲ ಅಸ್ತ್ರವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಆರೋಪಿಸಿದರು.
ಇಲ್ಲಿನ ಬಿ.ಸಿ.ರೋಡಿನಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ನಡೆದ ಪಂಜಿನ ಮೆರವಣಿಗೆ ಕಾರ್ಯಕ್ರಮದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು.
ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಮಾತನಾಡಿ, 'ದೇಶದಲ್ಲಿ ಕಳೆದ 11 ವರ್ಷಗಳ ಹಿಂದೆ ವಿದೇಶದಿಂದ ಕಪ್ಪು ಹಣ ತರುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರಿಂದ ಕೇವಲ ಭರವಸೆ ಮತ್ತು ಘೋಷಣೆಗೆ ಸೀಮಿತವಾಗಿರುವುದು ಬೆಲೆ ಏರಿಕೆಗೆ ಕಾರಣವಾಗಿದೆ' ಎಂದರು.
ದೇಶದಲ್ಲಿ ಮತಗಳ್ಳತನ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಜನ ಜಾಗೃತಿ ಹೋರಾಟಕ್ಕೆ ಬೆಂಬಲ ನೀಡುವ ನಿಟ್ಟಿನಲ್ಲಿ ಬಿ.ಸಿ.ರೋಡು ಪೇಟೆಯಲ್ಲಿ ಬೃಹತ್ 'ಪಂಜಿನ ಮೆರವಣಿಗೆ' ನಡೆದಿದೆ ಎಂದರು
ಯುವ ಕಾಂಗ್ರೆಸ್ ಘಟಕ ಜಿಲ್ಲಾಧ್ಯಕ್ಷ ನವಾಜ್ ಬದಕಬೈಲು ಪ್ರಾಸ್ತಾವಿಕವಾಗಿ ಮಾತನಾಡಿದರು
ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಎ.ಗಫೂರ್, ರಾಜ್ಯ ಬೀಜ ನಿಗಮದ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಜಿ.ಪಂ. ಮಾಜಿ ಸದಸ್ಯರಾದ ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಬಿ.ಪದ್ಮಶೇಖರ ಜೈನ್, ಪ್ರಮುಖರಾದ ಪಿಯೂಸ್ ರೋಡ್ರಿಗಸ್, ಅಬ್ಬಾಸ್ ಆಲಿ, ಬೂಡಾ ಅಧ್ಯಕ್ಷ ಬೇಬಿ ಕುಂದರ್, ಪುರಸಭೆ ಅಧ್ಯಕ್ಷ ವಾಸು ಪೂಜಾರಿ, ಬಂಟ್ವಾಳ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ ಕುಮಾರ್ ಸಿಂಧ್ಯಾ, ಬ್ಲಾಕ್ ಅಧ್ಯಕ್ಷ ಪ್ರಜ್ವಲ್, ಪ್ರಮುಖರಾದ ಕೆ.ಪದ್ಮನಾಭ ರೈ, ಐಡಾ ಸುರೇಶ್ , ಚಂದ್ರಶೇಖರ ಪೂಜಾರಿ, ವೆಂಕಪ್ಪ ಪೂಜಾರಿ ಬಂಟ್ವಾಳ, ಸುದೀಪ್ ಕುಮಾರ್ ರೈ, ಮಹಮ್ಮದ್ ನಂದರಬೆಟ್ಟು, ಮಹಮ್ಮದ್ ನಂದಾವರ, ಚಿತ್ತರಂಜನ್ ಶೆಟ್ಟಿ, ಲುಕ್ಮಾನ್ಮ ಬಂಟ್ವಾಳ, ಮಧುಸೂಧನ್ ಶೆಣೈ ಮತ್ತಿತರರು ಇದ್ದರು.
ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ ಸ್ವಾಗತಿಸಿದರು. ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್ ವಂದಿಸಿದರು. ಬಾಲಕೃಷ್ಣ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.