ಮಂಗಳೂರು: ಮಹಾನಗರ ಪಾಲಿಕೆ ಹಾಗೂ ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ಕಾರ್ಯಾಚರಿಸುತ್ತಿರುವ ಲೇಡಿಹಿಲ್ ಸರ್ಕಾರಿ ನಗರ ಆರೋಗ್ಯ ಕೇಂದ್ರಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಿ ಮೇಲ್ದರ್ಜೇರಿಸಲು ಸಿಪಿಎಂ ಮಂಗಳೂರು ನಗರ ದಕ್ಷಿಣ ಸಮಿತಿ ಆಗ್ರಹಿಸಿದೆ.
ಜನರು ಚಿಕಿತ್ಸೆ ಪಡೆಯಲು ಲೇಡಿಹಿಲ್ ವೃತ್ತದ ಬಳಿಯಿರುವ ನಗರ ಆರೋಗ್ಯ ಕೇಂದ್ರಕ್ಕೆ ತೆರಳಿದರೆ ಅಲ್ಲಿ ಯಾವುದೇ ರೀತಿಯ ಸೌಲಭ್ಯಗಳು ಲಭ್ಯ ಇಲ್ಲ. ಔಷಧ, ನುರಿತ ಸಿಬ್ಬಂದಿ ಕೊರತೆಯೂ ಇದೆ. ಕಟ್ಟಡ ಹಳೆಯದಾಗಿದ್ದು, ಮಳೆಗಾಲದಲ್ಲಿ ಚಾವಣಿ ಸೋರುತ್ತದೆ. ಮಧುಮೇಹ, ರಕ್ತದೊತ್ತಡದಂತಹ ಕಾಯಿಲೆಗೆ ನೀಡುವ ಔಷಧ ಕೂಡ ಇಲ್ಲಿ ಸಿಗುವುದಿಲ್ಲ. ವೈದ್ಯಾಧಿಕಾರಿ ಹುದ್ದೆ ಅನೇಕ ವರ್ಷಗಳಿಂದ ಖಾಲಿ ಇದೆ. ಜನರ ಆರೋಗ್ಯ ಕಾಳಜಿ ವಹಿಸಬೇಕಾಗಿದ್ದ ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತವು ಆರೋಗ್ಯ ಕೇಂದ್ರವನ್ನು ಸಂಪೂರ್ಣ ಕಡೆಗಣಿಸುತ್ತಿರುವುದು ಜನವಿರೋಧಿ ನಡೆಯಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಹಣವನ್ನು ವ್ಯರ್ಥ ಮಾಡುವ ಬದಲು ಆಸ್ಪತ್ರೆಗಳಿಗೆ ಮೂಲ ಸೌಕರ್ಯ ಒದಗಿಸಿದರೆ ಜನರಿಗೆ ಅನುಕೂಲವಾಗುತ್ತದೆ ಎಂದು ಕಾರ್ಯದರ್ಶಿ ಸಂತೋಷ್ ಬಜಾಲ್ ಸಲಹೆ ಮಾಡಿದ್ದಾರೆ. ಈ ಸಂಬಂಧ ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.