ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶೋಧಕಾರ್ಯ ನಡೆಯುತ್ತಿರುವ ಜಾಗಕ್ಕೆ ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಇತ್ತೀಚೆಗೆ ಭೇಟಿ ನೀಡಿದ್ದ ಚಿತ್ರ
ಪ್ರಜಾವಾಣಿ ಚಿತ್ರ: ಫಕ್ರುದ್ದೀನ್ ಎಚ್
ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಪರಾಧಗಳಲ್ಲಿನ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ತನಿಖೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಸ್ಐಟಿಯ ಅಧಿಕಾರಿಗಳ ಜೊತೆ ಬುಧವಾರ ಸಮಾಲೋಚನೆ ನಡೆಸಿದರು.
ಎಸ್ಐಟಿಯ ಬೆಳ್ತಂಗಡಿ ಕಚೇರಿಗೆ ಭೇಟಿ ನೀಡಿದ ಅವರು, ‘ತನಿಖೆಯಲ್ಲಿ ಇದುವರೆಗೆ ಆಗಿರುವ ಪ್ರಗತಿಯನ್ನು ಪರಿಶೀಲಿಸಿದರು. ಧರ್ಮಸ್ಥಳ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರು ಮತ್ತು ಸಿಬ್ಬಂದಿ, ಸ್ವಚ್ಛತಾ ಕಾರ್ಮಿಕರು, ಆಂಬುಲೆನ್ಸ್ ಚಾಲಕರು ಹಾಗೂ ಇತರರು ನೀಡಿರುವ ಮಾಹಿತಿ, ಸಿಕ್ಕಿರುವ ಸುಳಿವುಗಳು, ಲಭ್ಯ ಇರುವ ಪುರಾವೆಗಳ ಆಧಾರದಲ್ಲಿ ತನಿಖೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ದಾರಿಗಳ ಬಗ್ಗೆಯೂ ಸಮಾಲೋಚಿಸಿದರು. ತನಿಖೆ ಮುಂದುವರಿಸುವಲ್ಲಿ ಇರುವ ಸವಾಲುಗಳ ಕುರಿತು ಚರ್ಚಿಸಿದರು' ಎಂದು ಮೂಲಗಳು ತಿಳಿಸಿವೆ.
ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಬಳಿಯ ಕಾಡಿನಲ್ಲಿ ನೆಲದ ಮೇಲೆಯೇ ಸಿಕ್ಕಿದ್ದ ಮೃತದೇಹಗಳ ಅವಶೇಷಗಳು ಯಾರದ್ದು ಎಂಬುದನ್ನು ಪತ್ತೆ ಹಚ್ಚುವ ವಿಚಾರದಲ್ಲಿ ಆಗಿರುವ ಪ್ರಗತಿಯ ಬಗ್ಗೆಯೂ ಮಾಹಿತಿ ಪಡೆದರು. ತನಿಖೆಗೆ ಸಂಬಂಧಿಸಿದ ಕೆಲವು ಕಡತಗಳನ್ನು, ಬಿಲ್ ಪಾವತಿಗೆ ಸಂಬಂಧಿಸಿದ ಕಡತಗಳನ್ನು ಮೊಹಾಂತಿ ಅವರು ವಿಲೇವಾರಿ ಮಾಡಿದರು ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.