ಮೂಡುಬಿದಿರೆ: ಕೃಷಿ ಇಲಾಖೆಯಿಂದ ಮಾನ್ಯತೆ ಪಡೆದ ಕೃಷಿ ಮಳಿಗೆಗಳಲ್ಲಿ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ದರವನ್ನು ರೈತರಿಂದ ಪಡೆದರೆ ಅಂಥ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗುವುದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವೀಣಾ ರೈ ಎಚ್ಚರಿಸಿದರು.
ಇಲ್ಲಿನ ರೈತ ಸಂಪರ್ಕ ಕೇಂದ್ರದಲ್ಲಿ ರೈತರಿಗೆ ಹಮ್ಮಿಕೊಂಡಿದ್ದ ವಿವಿಧ ಬೆಳೆಗಳ ಕೃಷಿ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ರೈತರ ಜೀವನಮಟ್ಟ ಸುಧಾರಣೆಗೆ ಮಿಶ್ರ ಬೆಳೆಗಳು ಹಾಗೂ ಯಾಂತ್ರೀಕೃತ ಸವಲತ್ತುಗಳ ಬಳಕೆಯ ಬಗ್ಗೆ ಅವರು ಮಾಹಿತಿ ನೀಡಿದರು.
ಮೂಡುಬಿದಿರೆಯ ಕೆಲವು ಮಳಿಗೆಗಳಲ್ಲಿ ರೈತರು ಖರೀದಿಸುವ ರಸಗೊಬ್ಬರ ಚೀಲಗಳಿಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚುವರಿಯಾಗಿ ₹ 200ರಿಂದ 300 ಪಡೆಯುತ್ತಾರೆ. ಅಂಥವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕೆಲವು ರೈತರು ಸಭೆಯಲ್ಲಿ ಅಧಿಕಾರಿಗಳನ್ನು ಪ್ರಶ್ನಿಸಿದರು.
ಸರ್ಕಾರದಿಂದ ಸಿಗುವ ಸವಲತ್ತುಗಳಲ್ಲಿ ರೈತರಿಗೆ ವಂಚನೆ, ಅನ್ಯಾಯವಾಗಬಾರದು. ರೈತರು ದೂರು ಕೊಟ್ಟರೆ ಅದನ್ನು ಪರಿಶೀಲಿಸಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕೆ.ಕೃಷ್ಣರಾಜ ಹೆಗ್ಡೆ ಕೃಷಿ ಇಲಾಖೆಯ ಉಪನಿರ್ದೇಶಕಿಗೆ ತಿಳಿಸಿದರು.
ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪ್ರವೀಣ್ ಅವರು ಬೆಳೆ ಸಮೀಕ್ಷೆ ಮತ್ತು ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಿದರು.
ಜೇನುಕೃಷಿ ಬಗ್ಗೆ ದೀಪಾ ಮಾಹಿತಿ ನೀಡಿದರು. ಜಿಲ್ಲಾ ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಸಂಪತ್ ಸಾಮ್ರಾಜ್ಯ, ಹಿರಿಯ ಕೃಷಿಕ ಸೀತಾರಾಮ ಶೆಟ್ಟಿ, ಕೃಷಿ ವಿಜ್ಞಾನ ಕೇಂದ್ರದ ಹರೀಶ್, ಪಶುಸಂಗೋಪನೆ ಇಲಾಖೆಯ ಡಾ.ಮಂಜುನಾಥ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.