ADVERTISEMENT

ದಕ್ಷಿಣ ಕನ್ನಡ: ಜಿಲ್ಲಾಧಿಕಾರಿಗೆ ಲೋಕಾಯುಕ್ತ ನೋಟಿಸ್

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 4:37 IST
Last Updated 27 ಅಕ್ಟೋಬರ್ 2021, 4:37 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮಂಗಳೂರು: ನಗರದ ಹೊರವಲಯದ ಜೋಕಟ್ಟೆಯಲ್ಲಿರುವ ಕೈಗಾರಿಕಾ ಸಂಸ್ಥೆಯಿಂದ ಹೊಳೆ ಮತ್ತು ಫಲ್ಗುಣಿ ನದಿಗೆ ತ್ಯಾಜ್ಯ ನೀರು ಸೇರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತವು, ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಜಿಲ್ಲಾಧಿಕಾರಿ ಸೇರಿದಂತೆ ಹಲವು ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಿದೆ.

ಜಲಮೂಲ ಕಲುಷಿತಗೊಳ್ಳುತ್ತಿರುವ ಬಗ್ಗೆ ವಸ್ತುಸ್ಥಿತಿಯ ವರದಿ ಮತ್ತು ಅದರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮದ ಬಗ್ಗೆ ನವೆಂಬರ್ 2ರ ಒಳಗಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತ, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ, ಮಂಗಳೂರು ತಹಶೀಲ್ದಾರ್,ಕೆಎಸ್‌ಪಿಸಿಬಿಯ ಹಿರಿಯ ಪರಿಸರ ಅಧಿಕಾರಿ, ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿದೆ.

‘ಲೋಕಾಯುಕ್ತದಲ್ಲಿ ಸ್ವಯಂಪ್ರೇರಿತ ದೂರು ದಾಖಲಾಗುವ ಮೊದಲೇ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿಗೆ ಈ ಸಂಬಂಧ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಸೂಚಿಸಲಾಗಿತ್ತು. ಪರಿಶೀಲನೆ ವೇಳೆ ಕೆಲವು ನ್ಯೂನತೆಗಳು ಕಂಡುಬಂದಿವೆ. ಅದನ್ನು ಸರಿಪಡಿಸುವಂತೆ ಸಂಬಂಧಪಟ್ಟ ಕೈಗಾರಿಕಾ ಸಂಸ್ಥೆಗೆ ಸೂಚನೆ ನೀಡಲಾಗಿದೆ.

ADVERTISEMENT

ಸಂಸ್ಥೆ ಕ್ರಮ ವಹಿಸಲು ವಿಫಲವಾದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕ್ರಮ ಕೈಗೊಂಡಿರುವ ಬಗ್ಗೆ ಲೋಕಾಯುಕ್ತಕ್ಕೆ ಸೋಮವಾರ ವರದಿ ಸಲ್ಲಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.