ಕರ್ನಾಟಕ ಲೋಕಾಯುಕ್ತ
ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದರಿಂದ ಕಂದಾಯ ಮತ್ತು ನಗರ ಯೋಜನಾ ವಿಭಾಗದ ಕಚೇರಿಗಳಲ್ಲಿ ಶನಿವಾರ ಪರಿಶೀಲನೆ ನಡೆಸಿದ್ದು, ಈ ವೇಳೆ ದಲ್ಲಾಳಿಯೊಬ್ಬರ ಬಳಿ ₹ 5 ಲಕ್ಷ ನಗದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ (ಪ್ರಭಾರ) ಕುಮಾರಚಂದ್ರ ತಿಳಿಸಿದ್ದಾರೆ.
'ಪಾಲಿಕೆಯ ಕಂದಾಯ ವಿಭಾಗ, ಆರೋಗ್ಯ ವಿಭಾಗ, ಎಂಜಿನಿಯರಿಂಗ್ ವಿಭಾಗ, ಲೆಕ್ಕ ಪತ್ರ ವಿಭಾಗ, ನಗರ ಯೋಜನಾ ವಿಭಾಗ ಹಾಗೂ ಆಯುಕ್ತರ ಕಚೇರಿಯ ಕಡತಗಳ ವಿಲೇವಾರಿಯಲ್ಲಿ ಹಲವಾರು ನ್ಯೂನತೆಗಳು ಪರಿಶೀಲನೆ ವೇಳೆ ಕಂಡುಬಂದಿವೆ. ನಗರ ಯೋಜನಾ ವಿಭಾಗದ ಅಧಿಕಾರಿಗಳು ಕಟ್ಟಡ ಪರವಾನಗಿ ನೀಡುವಾಗ ನಿಬಂಧನೆಗಳನ್ನು ಪಾಲಿಸಿಲ್ಲ. ಕಟ್ಟಡ ಉಪವಿಧಿ ನಿಯಮಗಳನ್ನು ಉಲ್ಲಂಘಿಸಿದ ಕಟ್ಟಡಗಳನ್ನು ನೆಲಸಮ ಮಾಡಲು ಆದೇಶವಾಗಿದ್ದರೂ, ನಗರ ಯೋಜನೆ ವಿಭಾಗದ ಎಂಜಿನಿಯರ್ ಮತ್ತು ಆಯುಕ್ತರು ಆ ಕಟ್ಟಡಗಳಿಗೆ ಕಾನೂನುಬಾಹಿರವಾಗಿ ಅನುಮತಿ ನೀಡಿದ್ದಾರೆ. ಈ ಬಗ್ಗೆ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಿದ್ದೇವೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.