ಮಂಗಳೂರು: ಇಲ್ಲಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಯುವತಿಯ ಜೊತೆಗೆ ಪ್ರಯಾಣಿಸುತ್ತಿದ್ದ ಯುವಕನ ಮೇಲೆ ಕೆಲ ವ್ಯಕ್ತಿಗಳು ಹಲ್ಲೆ ಮಾಡಿದ್ದಾರೆ.
ಗುರುವಾರ ರಾತ್ರಿ ನಗರದ ಪಂಪ್ವೆಲ್ ಬಳಿ ಈ ಘಟನೆ ನಡೆದಿದೆ. ಬೈಕಂಪಾಡಿ -ಜೋಕಟ್ಟೆ ನಿವಾಸಿ ಅಸ್ವಿದ್ ಅನ್ವರ್ ಮುಹಮ್ಮದ್ ಹಲ್ಲೆಗೆ ಒಳಗಾದವರು. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ನಲ್ಲಿ ಈ ಯುವಕ ಪ್ರಯಾಣಿಸುತ್ತಿದ್ದ. ರಾತ್ರಿ ಸುಮಾರು 9.30ಕ್ಕೆ ಬಸ್ ತಡೆದು ನಿಲ್ಲಿಸಿದ ನಾಲ್ಕೈದು ಮಂದಿಯ ತಂಡ ಯುವಕನನ್ನು ಬಸ್ನಿಂದ ಹೊರಗೆಳೆದು ಹಲ್ಲೆ ನಡೆಸಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕನ ಜೊತೆ ಯುವತಿಯೊಬ್ಬಳಿದ್ದು, ಆಕೆಯನ್ನು ಪೋಷಕರ ವಶಕ್ಕೆ ಒಪ್ಪಿಸಲಾಗಿದೆ. ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಒಂದು ವಾರದಲ್ಲಿ ಜಿಲ್ಲೆಯ ಸುರತ್ಕಲ್, ಬಂಟ್ವಾಳ, ಪಂಪ್ವೆಲ್ ಬಳಿ ಇಂತಹ ಘಟನೆಗಳು ನಡೆದಿವೆ.
ಬಂಧನಕ್ಕೆ ಕ್ರಮ: ನಗರದ ಪಂಪ್ವೆಲ್ ಬಳಿ ಯುವಕನ ಮೇಲೆ ಹಲ್ಲೆ ನಡೆದಿದ್ದು, ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೊತೆಗಿದ್ದ ಯುವತಿಯನ್ನು ಮನೆಗೆ ಕಳುಹಿಸಲಾಗಿದೆ. ಹಲ್ಲೆಗೆ ಸಂಬಂಧಿಸಿದಂತೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.