ADVERTISEMENT

ಸಭೆಗಳಿಗೆ ಗೈರು ಹಾಜರಾದರೆ ಕ್ರಮ: ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 12:58 IST
Last Updated 17 ಅಕ್ಟೋಬರ್ 2019, 12:58 IST
ಸಿಂಧೂ ಬಿ.ರೂಪೇಶ್‌
ಸಿಂಧೂ ಬಿ.ರೂಪೇಶ್‌   

ಮಂಗಳೂರು: ತಾಲ್ಲೂಕು ಮಟ್ಟದ ಯಾವುದೇ ಅಧಿಕಾರಿಗಳು ಸಭೆಗೆ ಗೈರು ಹಾಜರಾದಲ್ಲಿ, ಮುಂದಿನ ಸಭೆಯಲ್ಲಿ ಕಡ್ಡಾಯವಾಗಿ ಉಪಸ್ಥಿತರಿದ್ದು, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯ ಪ್ರಗತಿಯನ್ನು ಸಭೆಗೆ ಒದಗಿಸಬೇಕು. ಇಲ್ಲದಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಎಚ್ಚರಿಕೆ ನೀಡಿದರು.

ಗುರುವಾರ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್‌ನಲ್ಲಿ ನಡೆದ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳನ್ನು ಆದಷ್ಟು ಬೇಗ ಫಲಾನುಭವಿಗಳಿಗೆ ದೊರಕುವಂತೆ ಜಾರಿಗೆ ತರಬೇಕು ಎಂದರು.

ADVERTISEMENT

ಕೃಷಿ ಇಲಾಖೆ ಎಸ್‌ಸಿಪಿ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ₹16.40 ಲಕ್ಷ ಅನುದಾನ ಮಂಜೂರಾಗಿದ್ದು, ಶೇ 50 ರಷ್ಟು ಭೌತಿಕ ಸಾಧನೆಯಾಗಿದೆ. ಟಿಎಸ್ಪಿ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ₹7.40 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಶೇ 64ರಷ್ಟು ಸಾಧನೆಯಾಗಿರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್ ಎಸ್.ಬಿ. ವಿವರ ನೀಡಿದರು.

ತೋಟಗಾರಿಗೆ ಇಲಾಖೆ ಎಸ್‌ಸಿಪಿ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ₹3.40 ಲಕ್ಷ ಅನುದಾನ ಮಂಜೂರಾಗಿದ್ದು, ಶೇ 52 ರಷ್ಟು ಭೌತಿಕ ಸಾಧನೆಯಾಗಿದೆ. ಟಿಎಸ್‌ಪಿ ಯೋಜನೆಯಡಿ ₹4.48 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಶೇ 44 ರಷ್ಟು ಸಾಧನೆಯಾಗಿದೆ ಎಂದು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ಸುಂದರ್ ಪೂಜಾರಿ ಮತ್ತು ಇಲಾಖಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.