ಪುತ್ತೂರು: ದೈಹಿಕ ಮತ್ತು ಮಾನಸಿಕ ಕ್ಷಮತೆ ಕಾಪಾಡಲು ಪೂರಕವಾಗಿರುವ ವಾಲಿಬಾಲ್ ಕ್ರೀಡೆಗೆ ಇತ್ತೀಚಿನ ದಿನಗಳಲ್ಲಿ ಪ್ರೋತ್ಸಾಹ ಕಡಿಮೆಯಾಗುತ್ತಿರುವುದು ಬೇಸರ ಉಂಟುಮಾಡಿದೆ ಎಂದು ಪುತ್ತೂರು ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಸತೀಶ್ ರೈ ಕಟ್ಟಾವು ಹೇಳಿದರು.
ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜಿನ ಆಶ್ರಯದಲ್ಲಿ ಗುರುವಾರ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಂಗಳೂರು ವಿಭಾಗದ ಪುರುಷರ ವಾಲಿಬಾಲ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾಲೇಜು ಆಡಳಿತ ಮಂಡಳಿ ನಿರ್ದೇಶಕ ಸಂತೋಷ್ ಕುತ್ತಮೊಟ್ಟೆ ಮಾತನಾಡಿ, ಕ್ರೀಡಾ ಚಟುವಟಿಕೆಯಿಂದ ಮನಸ್ಸಿನ ಒತ್ತಡ ಕಡಿಮೆ ಆಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಮಹೇಶ್ಪ್ರಸನ್ನ ಕೆ. ಮಾತನಾಡಿ, ಕ್ರೀಡಾಕೂಟದ ಆಯೋಜನೆಗೆ ಕಾಲೇಜು ಪ್ರೋತ್ಸಾಹ ನೀಡುತ್ತಿದ್ದು, ಈ ವರ್ಷ ಮಂಗಳೂರು ವಿಭಾಗ ಮಟ್ಟದ ಕೊಕ್ಕೊ, ಕಬಡ್ಡಿ ಹಾಗೂ ವಾಲಿಬಾಲ್ ಟೂರ್ನಿ ಆಯೋಜಿಸಿದೆ ಎಂದರು.
ಪೆರ್ಲಂಪಾಡಿಯ ಷಣ್ಮುಖದೇವ ಪ್ರೌಡಶಾಲೆಯ ಸಂಚಾಲಕ ಶಿವರಾಮ ಭಟ್ ಭಾಗವಹಿಸಿದ್ದರು. ಸಾತ್ವಿಕ್ ವಿ.ನಾಯಕ್ ಪ್ರಾರ್ಥಿಸಿದರು. ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಮನುಜೇಶ್ ಬಿ.ಜೆ. ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ವಂದಿಸಿದರು. ಎಲೆಕ್ಟ್ರಾನಿಕ್ಸ್ ವಿಭಾಗದ ಹರಿಪ್ರಸಾದ್ ಡಿ.ನಿರೂಪಿಸಿದರು. ಮಂಗಳೂರು ವಿಭಾಗದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ 20 ತಂಡಗಳು ಭಾಗವಹಿಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.