ಮಂಗಳೂರು: ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿ ಪೊಲೀಸ್ ಗೋಲಿಬಾರ್ನಲ್ಲಿಇಬ್ಬರು ಮೃತಪಟ್ಟಿರುವ ಪ್ರಕರಣಕುರಿತು ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಪಕ್ಷದ ಮುಖಂಡರೊಂದಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಭಾನುವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಬಿ.ರಮಾನಾಥ ರೈ, ‘ಗೋಲಿಬಾರ್ ಪ್ರಕರಣದ ಸಮಗ್ರ ತನಿಖೆ ನಡೆಸಬೇಕು. ಘಟನೆ ಸಂಪೂರ್ಣ ಸತ್ಯಾಂಶವನ್ನು ಹೊರತರುವ ಉದ್ದೇಶದಿಂದ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳಿಂದಲೇ ತನಿಖೆ ನಡೆಸಬೇಕು’ ಎಂದು ಒತ್ತಾಯಿಸಿದರು.
ಹಿಂಸಾಚಾರ ಮತ್ತು ಗೋಲಿಬಾರ್ ನಡೆಯಲು ರಾಜ್ಯದ ಬಿಜೆಪಿ ಸರ್ಕಾರ ನೇರ ಕಾರಣ. ಪ್ರತಿಭಟನೆಯ ಹಕ್ಕನ್ನು ಮೊಟಕು ಮಾಡಿ ನಿಷೇಧಾಜ್ಞೆ ಹೊರಡಿಸಿದ್ದೇ ಗಲಭೆಗೆ ಕಾರಣವಾಯಿತು ಎಂದು ಆರೋಪಿಸಿದರು.
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳೂರಿಗೆ ಬರದಂತೆ ಪೊಲೀಸರು ತಡೆ ಒಡ್ಡಿದ್ದಾರೆ. ಆದರೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗಲಭೆ ಸೃಷ್ಟಿಸುವವರನ್ನು ತಮ್ಮ ಜೊತೆ ಮಂಗಳೂರಿಗೆ ಕರೆತಂದಿದ್ದರು ಎಂದು ಟೀಕಿಸಿದರು.
ಗಲಭೆ, ಹಿಂಸಾಚಾರವನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ಮತೀಯವಾದಿ ರಾಜಕೀಯ ಪಕ್ಷಗಳು ಮಾತ್ರ ಹಿಂಸಾಚಾರದಲ್ಲಿ ಭಾಗಿಯಾಗುತ್ತಿವೆ. ಈ ಸತ್ಯ ಎಲ್ಲರಿಗೂ ಗೊತ್ತಿದೆ ಎಂದರು.
ಕಾಂಗ್ರೆಸ್ ಪಕ್ಷ ಮಾತ್ರ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ವಿರೋಧಿಸುತ್ತಿಲ್ಲ. ಎನ್ ಡಿಎ ಮೈತ್ರಿಕೂಟದಲ್ಲಿರುವ ಜೆಡಿಯು, ಲೋಕ ಜನಶಕ್ತಿ ಪಕ್ಷ ಕೂಡ ವಿರೋಧಿಸುತ್ತಿವೆ. ಬಿಜೆಪಿ ಸರ್ಕಾರಕ್ಕೆ ವಿಷಯಾಧಾರಿತ ಬೆಂಬಲ ನೀಡಿರುವ ಬಿಜೆಡಿ, ವೈಎಸ್ಆರ್ ಕಾಂಗ್ರೆಸ್ ಕೂಡ ವಿರೋಧಿಸಿವೆ. ಎಡ ಪಕ್ಷಗಳು ಆರಂಭದಿಂದಲೂ ವಿರೋಧಿಸುತ್ತಿವೆ. ಬಿಜೆಪಿ ಈ ವಿಚಾರದಲ್ಲಿ ಸುಳ್ಳು ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಕ್ಷಮೆಯಾಚನೆಗೆ ಆಗ್ರಹ:ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿ, ‘ಗೋಲಿಬಾರ್ ಕುರಿತು ಪರಿಶೀಲನೆಗೆ ಬಂದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿಲ್ಲ. ಘಟನೆ ಕುರಿತು ತನಿಖೆಗೂ ಆದೇಶಿಸಿಲ್ಲ. ಇಂತಹ ಬೇಜವಾಬ್ದಾರಿ ನಡವಳಿಕೆಗಾಗಿ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು' ಎಂದು ಒತ್ತಾಯಿಸಿದರು.
ಹಿಂಸಾಚಾರ ಮತ್ತು ಗೋಲಿಬಾರ್ ನಡೆಯಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ವೈಫಲ್ಯ ಕಾರಣ. ಅವರು ಘಟನೆಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.