ಮಂಗಳೂರು: ಮಹಾನಗರ ಪಾಲಿಕೆಯ ಅಭಿವೃದ್ಧಿಯಲ್ಲಿ ಪೌರಕಾರ್ಮಿಕರ ಕೊಡುಗೆ ಗಮನಾರ್ಹವಾದುದು ಎಂದು ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಹೇಳಿದರು.
ಮಹಾನಗರ ಪಾಲಿಕೆ ವತಿಯಿಂದ ಮಂಗಳವಾರ ಇಲ್ಲಿ ನಡೆದ ಪೌರ ಕಾರ್ಮಿಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಪೌರ ಕಾರ್ಮಿಕರಿಂದಾಗಿ ಮಹಾನಗರ ಪಾಲಿಕೆಗೆ ಗೌರವ ದೊರಕಿದೆ. ಪೌರಕಾರ್ಮಿಕರು ದೈನಂದಿನ ಜಂಟಾಟಗಳಿಂದ ದೂರ ಇದ್ದು, ಸಂಭ್ರಮಿಸಲು ಪೌರ ಕಾರ್ಮಿಕರ ದಿನ ಆಚರಿಸಲಾಗುತ್ತದೆ ಎಂದರು.
ಪಾಲಿಕೆ ಸಮುದಾಯ ಸಂಘಟನಾಧಿಕಾರಿ ಮಾಲಿನಿ ರೋಡ್ರಿಗಸ್ ಮಾತನಾಡಿ, ನಗರ ಸ್ವಚ್ಛತೆಯ ಜೊತೆಗೆ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಪೌರ ಕಾರ್ಮಿಕರಿಗೆ ಪಾಲಿಕೆ ವಿಮೆ ಮಾಡಿಸಿದ್ದು, ಈ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವುದಕ್ಕಿಂತ ಮೊದಲು ಮಾಹಿತಿ ನೀಡಬೇಕು. ಈ ವರ್ಷ ಆರೋಗ್ಯ ನಿಧಿಯನ್ನು ₹5 ಲಕ್ಷಕ್ಕೆ ಏರಿಸಲಾಗಿದೆ ಎಂದರು.
ಪಾಲಿಕೆ ಆರೋಗ್ಯಾಧಿಕಾರಿ ಡಾ. ಮಂಜಯ್ಯ ಶೆಟ್ಟಿ, ವಲಯ ಆಯುಕ್ತೆ ವಾಣಿ ಆಳ್ವ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ದೀಪ್ತಿ ಎನ್., ದಕ್ಷಿಣ ಕನ್ನಡ ಜಿಲ್ಲಾ ಪೌರ ಕಾರ್ಮಿಕ ಸಂಘದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಎಸ್.ಪಿ.ಆನಂದ್ ಉಪಸ್ಥಿತರಿದ್ದರು.
ಹಿರಿಯ ಹಾಗೂ ಸಾಧಕ ಪೌರಕಾರ್ಮಿಕರನ್ನು ಸನ್ಮಾನಿಸಲಾಯಿತು. ಇಂಡಿಯಾ ಸ್ವೀಟ್ ಹೌಸ್ ನೀಡಿದ ಸಿಹಿ ತಿನಿಸು ಪ್ಯಾಕೆಟ್ ಹಾಗೂ ವಿಶೇಷ ಕ್ಯಾಪ್ ಅನ್ನು ಪೌರಕಾರ್ಮಿಕರಿಗೆ ನೀಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.