ಮಂಗಳೂರು: ಇಲ್ಲಿನ ದೇರಳಕಟ್ಟೆಯಲ್ಲಿ ಭಾನುವಾರ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್ಸಿ) ವಿರುದ್ಧದ ಪ್ರತಿಭಟನಾ ಸಮಾವೇಶಕ್ಕೆ ತಂದಿದ್ದ ಕುರ್ಚಿ, ಶಾಮಿಯಾನ ತುಂಬಿದ್ದ ಲಾರಿ ಸೋಮವಾರ ಬೆಳಗ್ಗಿನ ಜಾವ ಬೆಂಕಿಗೆ ಆಹುತಿಯಾಗಿದೆ.
ಪೌರತ್ವ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಭಾನುವಾರ ಪ್ರತಿಭಟನೆ ನಡೆದಿತ್ತು. ಸಂಜೆ ವೇಳೆಗೆ ಪ್ರತಿಭಟನೆ ಮುಕ್ತಾಯವಾಗಿತ್ತು. ರಾತ್ರಿ ಕುರ್ಚಿ, ಶಾಮಿಯಾನವನ್ನು ಲಾರಿಗೆ ತುಂಬಿಸಿ ಅಲ್ಲಿಯೇ ನಿಲ್ಲಿಸಲಾಗಿತ್ತು. ಸೋಮವಾರ ಬೆಳಿಗ್ಗೆ 3.30ರ ಸುಮಾರಿಗೆ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಕೆಲವೇ ಕ್ಷಣಗಳಲ್ಲಿ ಲಾರಿ ಹೊತ್ತಿ ಉರಿದಿದೆ.
ಪ್ರತಿಭಟನೆಯನ್ನು ವಿರೋಧಿಸಿ ದುಷ್ಕರ್ಮಿಗಳು ಲಾರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಸಂಘಟಕರು ಆರೋಪಿಸಿದ್ದಾರೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು, 24 ಗಂಟೆಗಳ ಒಳಗೆ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರನ್ನು ಆಗ್ರಹಿಸುತ್ತಿದ್ದಾರೆ. ಇಲ್ಲವಾದರೆ ತೀವ್ರವಾಗಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಧಾವಿಸಿದ್ದಾರೆ. ಹೆಚ್ಚುವರಿ ಪೊಲೀಸ್ ಪಡೆಗಳನ್ನೂ ನಿಯೋಜಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.