ADVERTISEMENT

ರೆಂಜಿಲಾಡಿ: ಆನೆ ದಾಳಿಗೆ ಯುವತಿ ಸೇರಿ ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2023, 4:47 IST
Last Updated 20 ಫೆಬ್ರುವರಿ 2023, 4:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ    

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ರೆಂಜಿಲಾಡಿ ಗ್ರಾಮದಲ್ಲಿ ಸೋಮವಾರ ಮುಂಜಾನೆ ಆನೆ ದಾಳಿಯಿಂದ ಒಬ್ಬ ಯುವತಿ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಸ್ಥಳೀಯ ನಿವಾಸಿಗಳಾದ ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಮೃತಪಟ್ಟವರು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ‌.

ರಂಜಿತಾ ಅವರು ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿ. ಅವರು ಬೆಳಿಗ್ಗೆ ಸೊಸೈಟಿಗೆ ಕಾಡು ದಾರಿಯಲ್ಲಿ ಹೋಗುತ್ತಿದ್ದ ವೇಳೆ ನೈಲದಲ್ಲಿ ಆನೆ ದಾಳಿ ನಡೆಸಿತ್ತು.

ಆನೆಯನ್ನು ಕಂಡು ರಂಜಿತಾ ಅವರು ಬೊಬ್ಬೆ ಹೊಡೆದಿದ್ದರು. ಅವರನ್ನು ರಕ್ಷಿಸಲು ಧಾವಿಸಿದ ರಮೇಶ್ ಅವರ ಮೇಲೂ ಆನೆ ದಾಳಿ ನಡೆಸಿತ್ತು. ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ರಮೇಶ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಂಜಿತಾ ಅವರು ಆಸ್ಪತ್ರೆಗೆ ಸಾಗಿಸುವ ವೇಳೆ ಕೊನೆಯುಸಿರೆಳೆದಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ‌.

ಈ ಪರಿಸರದಲ್ಲಿ ಅನೇಕ ತಿಂಗಳುಗಳಿಂದ ಕಾಡಾನೆಗಳು ಕಾಣಿಸಿಕೊಳ್ಳುತ್ತಿವೆ. ಆದರೆ ಮನುಷ್ಯರ ಮೇಲೆ ದಾಳಿ ನಡೆಸಿದ್ದು ಇದೇ ಮೊದಲು ಎಂದು ಸ್ಥಳೀಯರು ತಿಳಿಸಿದ್ದಾರೆ.

'ಆನೆ ದಾಳಿಯಿಂದ ಇಬ್ಬರು ಮೃತಪಟ್ಟ ಬಗ್ಗೆ ಮಾಹಿತಿ ಬಂದಿದೆ. ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ನಾನು ಕೂಡಾ ಸ್ಥಳಕ್ಕೆ ಭೇಟಿ ನೀಡುತ್ತಿದ್ದೇನೆ' ಎಂದು ದಕ್ಷಿಣ ಕನ್ನಡ ಜಿಲ್ಲೆಯ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್ 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.