ADVERTISEMENT

ಮಂಗಳೂರು | ಕಾಂಗ್ರೆಸ್ ನೀತಿ: ಜಿಲ್ಲೆ ಹಗಲಿನಲ್ಲೇ ಸ್ತಬ್ದ

ಕೆಂಪುಕಲ್ಲು, ಮರಳು ಸಮಸ್ಯೆ ಬಗ್ಗೆ ಆರೋಪಿಸಿ ವಿವಿಧೆಡೆಗಳಲ್ಲಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2025, 7:16 IST
Last Updated 15 ಜುಲೈ 2025, 7:16 IST
ಬಿಜೆಪಿ ದಕ್ಷಿಣ ಮಂಡಲದ ವತಿಯಿಂದ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಮಾತನಾಡಿದರು
ಬಿಜೆಪಿ ದಕ್ಷಿಣ ಮಂಡಲದ ವತಿಯಿಂದ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಮಾತನಾಡಿದರು   

ಮಂಗಳೂರು: ಮಂಗಳೂರು ನಗರ ರಾತ್ರಿ 8 ಗಂಟೆ ಸ್ತಬ್ದವಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದರು. ಈಗ ಕಾಂಗ್ರೆಸ್ ಸರ್ಕಾರದ ನೀತಿಯಿಂದಾಗಿ ಕಾರ್ಮಿಕರಿಗೆ ಕೆಲಸವಿಲ್ಲದೆ, ಹಗಲಿನಲ್ಲೇ ಜಿಲ್ಲೆ ಸ್ತಬ್ದವಾಗುವ ಪರಿಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು.

ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು‌ ಸಮಸ್ಯೆ ಪರಿಹರಿಸಲು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ದಕ್ಷಿಣ ಮಂಡಲ ಸೋಮವಾರ ಇಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪುಕಲ್ಲು ಪೂರೈಕೆ ಸ್ಥಗಿತಗೊಂಡಿದ್ದು, ಕಾರ್ಮಿಕರು ಬೀದಿಪಾಲಾಗಿದ್ದಾರೆ. ಕಟ್ಟಡ ನಿರ್ಮಾಣ, ಕಲ್ಲು ಕೋರೆಯವರು, ಸಣ್ಣ ಹೋಟೆಲ್ ನಡೆಸುವವರು ತೊಂದರೆಗೆ ಒಳಗಾಗಿದ್ದಾರೆ. ಮಕ್ಕಳ ಶಾಲಾ ಶುಲ್ಕ ಪಾವತಿಸಲು ಹಣವಿಲ್ಲದೆ ಪರದಾಡುತ್ತಿದ್ದಾರೆ. ಸಮಸ್ಯೆ ಬಗೆಹರಿಸಬೇಕಾದ ಉಸ್ತುವಾರಿ ಸಚಿವರು ಮೌನವಾಗಿದ್ದಾರೆ ಎಂದರು.

ADVERTISEMENT

ಯು.ಟಿ.ಖಾದರ್ ಸ್ಪೀಕರ್ ಆಗಿದ್ದರೂ, ರಾಜಕಾರಣ ಬಿಟ್ಟಿಲ್ಲ. ಮಾಜಿ ಸಚಿವ ರಮಾನಾಥ ರೈ ಮತ್ತು ಖಾದರ್ ನಡುವಿನ ಬಣಗಳ ತಿಕ್ಕಾಟದಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ ಎಂದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಮರಳು, ಕೆಂಪುಕಲ್ಲು ಸಮಸ್ಯೆ ಬಗೆಹರಿಸಲು ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಒಂದೇ ಒಂದು ಸಭೆ ನಡೆದಿಲ್ಲ. ಕರಾವಳಿಗೆ ಪ್ರತ್ಯೇಕ ಮರಳು ನೀತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ, ಮರಳು ನೀತಿ ಜಾರಿಗೊಂಡಿಲ್ಲ. ಸಿಆರ್‌ಝಡ್ ವಲಯದಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿಲ್ಲ. ಅಕ್ರಮ ಮರಳು ಗಣಿಗಾರಿಕೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಹಿಂಬಾಲಕರು ಹಣ ಸಂಪಾದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಪ್ರಮುಖರಾದ ಮೋನಪ್ಪ ಭಂಡಾರಿ, ರಮೇಶ್ ಕಂಡೆಟ್ಟು, ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಮಂಜುಳಾ ರಾವ್, ನಂದನ್ ಮಲ್ಯ, ವಿಜಯಕುಮಾರ್ ಶೆಟ್ಟಿ ಭಾಗವಹಿಸಿದ್ದರು.

ಕಾವೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿದರು

ಮರಳು ಕೆಂಪುಕಲ್ಲು ಸಮಸ್ಯೆಯನ್ನು ವಾರದೊಳಗೆ ಪರಿಹಾರ ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಆದರೆ ಈವರೆಗೆ ಪರಿಹಾರ ದೊರೆತಿಲ್ಲ.

-ವೇದವ್ಯಾಸ ಕಾಮತ್ ಶಾಸಕ

‘ಜಿಲ್ಲೆಗೆ ಕಾಲಿಡಲು ಬಿಡೆವು’ ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಒಂದು ವಾರದಲ್ಲಿ 200ಕ್ಕೂ ಅಧಿಕ ಕೆಂಪುಕಲ್ಲು ಕೋರೆಗೆ ಪರವಾನಗಿ ನೀಡಿ ಸಮಸ್ಯೆ ಬಗೆಹರಿಸಿತ್ತು. ಆದರೆ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಇದು ಸಾಧ್ಯವಾಗುತ್ತಿಲ್ಲ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಹೇಳಿದರು.  ಮಂಗಳೂರು ಉತ್ತರ ಮಂಡಲ ಕಾವೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಮರಳು ಕೆಂಪು ಕಲ್ಲಿಗೆ ದುಬಾರಿ ತೆರಿಗೆ ಹಾಕಿ ಜನರು ಮನೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಸೋತ ರಾಜಕೀಯ ಪುಢಾರಿಗಳು ಹಣ ಮಾಡುವ ಕೆಲಸ ಮಾಡುತ್ತಿದ್ದು ಜಿಲ್ಲಾ ಉಸ್ತುವಾರಿ ಸಚಿವರು ರಿಮೋಟ್ ಮೂಲಕ ಬೆಂಗಳೂರಿನಲ್ಲಿ ಆಡಳಿತ ಮಾಡುತ್ತಿದ್ದಾರೆ. ಇದೇ ರೀತಿ ಆಡಳಿತ ಮುಂದುವರಿದರೆ ಜಿಲ್ಲೆಗೆ ಕಾಲಿಡಲು ಬಿಡುವುದಿಲ್ಲ ಎಂದರು. ಪ್ರಮುಖರಾದ ಮೋನಪ್ಪ ಭಂಡಾರಿ ತಿಲಕ್ ರಾಜ್ ಕೃಷ್ಣಾಪುರ ರಾಜೇಶ್ ಕೊಟ್ಟಾರಿ ಜನಾರ್ದನ ಗೌಡ ಪೂಜಾ ಪೈ ಶಾಂವಾಜ್ ಹುಸೇನ್ ರಣದೀಪ್ ಕಾಂಚನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.