ADVERTISEMENT

ತ್ರಿವರ್ಣದಲ್ಲಿ ಮಿನುಗಿದ ಮಂಗಳೂರು

ನಗರದ ವಿವಿಧೆಡೆಗಳಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 15:32 IST
Last Updated 15 ಆಗಸ್ಟ್ 2022, 15:32 IST
ಎಸ್‌ಸಿಡಿಸಿಸಿ ಬ್ಯಾಂಕ್ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಡೆಯಿತು
ಎಸ್‌ಸಿಡಿಸಿಸಿ ಬ್ಯಾಂಕ್ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನಡೆಯಿತು   

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಪ್ರಧಾನ ಕಚೇರಿಯಲ್ಲಿ (ಎಸ್‌ಸಿಡಿಸಿಸಿ) ಸ್ವಾತಂತ್ರ್ಯೋತ್ಸವದಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ. ಧ್ವಜಾರೋಹಣ ನೆರವೇರಿಸಿದರು.

ನಂತರ ಮಾತನಾಡಿದ ಅವರು, ‘ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪರ್ವಕಾಲದಲ್ಲಿ ದೇಶದ ಒಗ್ಗಟ್ಟು, ಏಕತೆ ಹಾಗೂ ಅಖಂಡತೆಯನ್ನು ಉಳಿಸುವ ಜತೆಗೆ ಸ್ವಾತಂತ್ರ್ಯದ ಮೌಲ್ಯವನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ದೇಶದ ಒಗ್ಗಟ್ಟನ್ನು ನಾವು ಕರ್ತವ್ಯ ನಿರ್ವಹಿಸುವ ಸಂಸ್ಥೆಗಳಲ್ಲೂ ತೋರ್ಪಡಿಸಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ 108 ವರ್ಷಗಳ ಇತಿಹಾಸವಿರುವ ಎಸ್‌ಸಿಡಿಸಿಸಿ ಬ್ಯಾಂಕ್ ಅನ್ನು ಅಭಿವೃದ್ಧಿ ಪಥದಲ್ಲಿಇನ್ನಷ್ಟು ಮುನ್ನಡೆಸುವ ಧೃಢ ಸಂಕಲ್ಪವನ್ನು ಮಾಡೋಣ’ ಎಂದರು.

ಬ್ಯಾಂಕ್‌ನ ಮಹಾಪ್ರಬಂಧಕ ಗೋಪಿನಾಥ್ ಭಟ್, ಉಪಮಹಾಪ್ರಬಂಧಕರಾದ ಅಶೋಕ್ ಕುಮಾರ್, ಜೆ.ಜೀವನ್ ಶೆಟ್ಟಿ, ಸಿಬ್ಬಂದಿ ಭಾಗವಹಿಸಿದ್ದರು.

ADVERTISEMENT

ಕಾಳಿಕಾಂಬಾ ವಿನಾಯಕ ದೇವಸ್ಥಾನ: ಕಾಳಿಕಾಂಬಾ ಸೇವಾ ಸಮಿತಿಯ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆವರಣದಲ್ಲಿ ಜರುಗಿತು.

ಸೇವಾ ಸಮಿತಿಯ ಅಧ್ಯಕ್ಷ ಜೆ. ವಿವೇಕ್ ಧ್ವಜಾರೋಹಣ ಮಾಡಿದರು. ಕ್ಷೇತ್ರದ ಎರಡನೇ ಮೊಕ್ತೇಸರ ಸುಂದರ ಆಚಾರ್ಯ ಸ್ವಾತಂತ್ರ್ಯದ ಸಂದೇಶ ಹೇಳಿದರು. ರಾಷ್ಟ್ರಗೀತೆ, ವಂದೇ ಮಾತರಂ ಗೀತೆ ಹಾಡಲಾಯಿತು. ಕ್ಷೇತ್ರದ ಮೂರನೇ ಮೊಕ್ತೇಸರ ಎ. ಲೋಕೇಶ್ ಆಚಾರ್ಯ ಚಿಲಿಂಬಿ, ಸೇವಾ ಸಮಿತಿಯ ಕೋಶಾಧಿಕಾರಿ ಉದಯ ತೋಡಾರ್, ಸೇವಾ ಸಮಿತಿಯ ಸದಸ್ಯರು ಇದ್ದರು. ಸೇವಾ ಸಮಿತಿಯ ಮಾಜಿ ಅಧ್ಯಕ್ಷ ಬಿ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಜಗದೀಶ್ ಸಿದ್ದಕಟ್ಟೆ ವಂದಿಸಿದರು.

ಎಕ್ಸ್‌ಪರ್ಟ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ

ಎಕ್ಸ್‌ಪರ್ಟ್ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಭಗವತಿ ದೇವಸ್ಥಾನದ ಆವರಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಶಾಸಕ ಡಿ. ವೇದವ್ಯಾಸ್ ಕಾಮತ್ ಧ್ವಜಾರೋಹಣ ಮಾಡಿದರು. ‘ಭಾರತೀಯರಾದ ನಾವು ದೇಶದ ಇತಿಹಾಸವನ್ನು ತಿಳಿದುಕೊಳ್ಳಬೇಕು. ಆಗ ಮಾತ್ರ ಇತಿಹಾಸವನ್ನು ಸೃಷ್ಟಿಸಲು ಸಾಧ್ಯ. ಇತಿಹಾಸ ಅರಿತಾಗ ನಮ್ಮ ಹಿರಿಯರು ಮಾಡಿದ ತ್ಯಾಗ, ಬಲಿದಾನಗಳು ಅರಿವಿಗೆ ಬರುತ್ತವೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಕ್ಸ್‌ಪರ್ಟ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್‍ ವಹಿಸಿದ್ದರು. ‘ದೇಶದ ಪ್ರಗತಿ ಯುವಜನಾಂಗದ ಕೈಯಲ್ಲಿದೆ. ಸ್ವಯಂಶಿಸ್ತು, ಕಠಿಣ ಪರಿಶ್ರಮದ ಮೂಲಕ ಶಿಕ್ಷಣ ಪಡೆದು ಉತ್ತಮ ನಾಗರಿಕರಾಗಿ ದೇಶಕ್ಕೆ ಕೊಡುಗೆ ಸಲ್ಲಿಸಬೇಕು. ದೇಶಕ್ಕೆ ಅಗೌರವ ತರುವ ಯಾವುದೇ ಕೆಲಸವನ್ನು ನಾವು ಮಾಡಬಾರದು’ ಎಂದರು.

ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್ ಅವರು 2022-23ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿ ಪರಿಷತ್‌ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಶಿಕ್ಷಣ ಸಂಸ್ಥೆಯ ಮಾಹಿತಿ-ತಂತ್ರಜ್ಞಾನ ವಿಭಾಗದ ನಿರ್ದೇಶಕ ಅಂಕುಶ್ ಎನ್. ನಾಯಕ್‍, ವಾಸ್ತುಶಿಲ್ಪ ತಜ್ಞೆ ದೀಪಿಕಾ ಎ.ನಾಯಕ್, ಟ್ರಸ್ಟಿ ಸುರೇಶ್ ಪೈ, ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ, ಕಾಲೇಜಿನ ಪ್ರಾಂಶುಪಾಲ ಪ್ರೊ. ರಾಮಚಂದ್ರ ಭಟ್ ಇದ್ದರು. ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಸರ್ವಸ್ವ ಮತ್ತು ಶರಣ್ಯ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.