ಮಂಗಳೂರು: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮ, ಸಮಾಜದಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜದ ಒಳಿತು–ಕೆಡುಕುಗಳನ್ನು ಎತ್ತಿ ಹಿಡಿದು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಪತ್ರಕರ್ತರ ಪಾತ್ರ ಮುಖ್ಯವಾದದ್ದು’ ಎಂದು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಥಿಯೋಲಾಜಿಕಲ್ ಕಾಲೇಜಿನ ಸಹಯೋಗದಲ್ಲಿ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ ಆವರಣದಲ್ಲಿ ಕನ್ನಡ ಪತ್ರಿಕೋದ್ಯಮದ ಮೂಲಪುರುಷ ಹರ್ಮನ್ ಮೋಗ್ಲಿಂಗ್ ಅವರ ಪ್ರತಿಮೆ ಕಾಲೇಜಿನ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಎಂ.ವಾಟ್ಸನ್ ಮಾತನಾಡಿ, ‘ಮೋಗ್ಲಿಂಗ್ ಮತ್ತು ಕಿಟೆಲ್ ಅವರು ಕನ್ನಡಿಗರ ಆಸ್ತಿ. ಕನ್ನಡ ಭಾಷೆಗೆ ಅವರ ಕೊಡುಗೆ ಅಪಾರ. ಮಂಗಳೂರಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅವರ ಪ್ರತಿಮೆ ಸ್ಥಾಪಿಸಬೇಕು ಅಥವಾ ಯಾವುದಾದರೂ ರಸ್ತೆಗೆ ಅವರ ಹೆಸರಿಡಬೇಕು’ ಎಂದರು.
ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಘಟಕದ ಅಧ್ಯಕ್ಷ ಹರೀಶ್ ಬಂಟ್ವಾಳ್ ಮಾತನಾಡಿದರು. ತುಳು ಅಕಾಡೆಮಿ ಮಾಜಿ ಸದಸ್ಯ ಬೆನೆಟ್, ಸಂಘಟನೆ ಉಪಾಧ್ಯಕ್ಷ ಲಕ್ಮಣ್ ಕುಂದರ್, ಪ್ರಧಾನ ಕಾರ್ಯದರ್ಶಿ ತಾರಾನಾಥ್ ಗಟ್ಟಿ ಕಾಪಿಕಾಡ್, ಸಂಘಟನಾ ಕಾರ್ಯದರ್ಶಿಗಳಾದ ಕೆನ್ಯೂಟ್ ಪಿಂಟೊ, ಹಮೀದ್ ವಿಟ್ಲ, ಜತೆ ಕಾರ್ಯದರ್ಶಿ ಈಶ್ವರ್ ವಾರಾಣಾಶಿ, ಕಾರ್ಯಕಾರಿ ಸಮಿತಿ ಸದಸ್ಯ ಹಮೀದ್ ವಿಟ್ಲ, ಸುಳ್ಯ ಘಟಕದ ಅಧ್ಯಕ್ಷ ಉಮೇಶ್ ಮಣಿಕ್ಕರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.