ADVERTISEMENT

ಮಂಗಳೂರು: ದೇವಸ್ಥಾನದ ಹುಂಡಿ ಹಣ ಅನ್ಯ ಧರ್ಮಕ್ಕೆ ಆರೋಪ– ಗಂಭೀರ ಚರ್ಚೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 10:10 IST
Last Updated 25 ಜುಲೈ 2025, 10:10 IST
<div class="paragraphs"><p>ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನಗಳ ವ್ಯವಸ್ಥಾಪನಾ  ಸಮಿತಿಗಳ ಸಭೆಯಲ್ಲಿ ಧಾರ್ಮಿಕ ಮುಖಂಡ ಲಕ್ಷ್ಮೀಶ ಗಬಲಡ್ಕ ಮಾತನಾಡಿದರು. ಸಚಿವ ದಿನೇಶ್ ಗುಂಡೂರಾವ್‌, ಶಾಸಕರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ ಮತ್ತಿತರರು ಪಾಲ್ಗೊಂಡಿದ್ದರು</p></div>

ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಭೆಯಲ್ಲಿ ಧಾರ್ಮಿಕ ಮುಖಂಡ ಲಕ್ಷ್ಮೀಶ ಗಬಲಡ್ಕ ಮಾತನಾಡಿದರು. ಸಚಿವ ದಿನೇಶ್ ಗುಂಡೂರಾವ್‌, ಶಾಸಕರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ ಮತ್ತಿತರರು ಪಾಲ್ಗೊಂಡಿದ್ದರು

   

ಮಂಗಳೂರು: ಧಾರ್ಮಿಕ ದತ್ತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ದೇವಸ್ಥಾನಗಳ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಮತ್ತು ಅನ್ಯಧರ್ಮದ ಅಭಿವೃದ್ಧಿಗೆ ಬಳಸುತ್ತಿದೆ ಎಂಬ ಆರೋಪದ ಕುರಿತು ನಗರದಲ್ಲಿ ಶುಕ್ರವಾರ ನಡೆದ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆಯಲ್ಲಿ ಗಂಭೀರ ಚರ್ಚೆಗೆ ಕಾರಣವಾಯಿತು.

ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ಆಯೋಜಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನಗಳ ಸಮಿತಿಗಳ ಸಭೆಯಲ್ಲಿ ಮಾತನಾಡಿದ ಶಾಸಕ ಮಂಜುನಾಥ ಭಂಡಾರಿ ‘ಹಿಂದು ದೇವಸ್ಥಾನಗಳ ಹಣ ಅನ್ಯಧರ್ಮದ ಏಳಿಗೆಗಾಗಿ ಬಳಸಲಾಗುತ್ತಿದೆ ಎಂಬ ಸುಳ್ಳು ಆರೋಪ ಆಗಾಗ ಕೇಳಿಬರುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ದೇವಸ್ಥಾನಗಳ ಎದುರು ಫಲಕಗಳನ್ನು ಅಳವಡಿಸಬೇಕು’ ಎಂದು ಆಗ್ರಹಿಸಿದರು.

ADVERTISEMENT

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯಲ್ಲಿ ಸಾವಿರಕ್ಕೂ ಅಧಿಕ ಸದಸ್ಯರು ಇದ್ದಾರೆ. ಅವರಿಗೆ ಅವರ ಜವಾಬ್ದಾರಿ ಏನೆಂದು ತಿಳಿಸಿಕೊಡಬೇಕು. ಧಾರ್ಮಿಕ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುವುದಕ್ಕಾಗಿ ನೀಡಿರುವ ಸ್ಥಾನಗಳು ದುರುಪಯೋಗ ಆಗಬಾರದು. ದೇವಸ್ಥಾನದ ಆವರಣದಲ್ಲಿ ಧಾರ್ಮಿಕ ಚಟುವಟಿಕೆ ಮಾತ್ರ ನಡೆಯಬೇಕು ಎಂದು ಅವರು ಹೇಳಿದರು.

ದೇವಸ್ಥಾನಗಳ ಆದಾಯದ ಬಗ್ಗೆ ನಿರಂತರ ಅಪಪ್ರಚಾರ ನಡೆಯುತ್ತಿದೆ. ರಾಜಕೀಯ ಉದ್ದೇಶದ ಇಂಥ ಮಾತುಗಳು ರಾಷ್ಟ್ರಮಟ್ಟದಲ್ಲೂ ಚರ್ಚೆಗೆ ಕಾರಣವಾಗಿವೆ. ಕಾಂಗ್ರೆಸ್ ಪಕ್ಷ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ‌ ವಿರೋಧಿ ಎಂಬ ಸುಳ್ಳನ್ನೂ ಹಬ್ಬಿಸಲಾಗುತ್ತಿದೆ. ಆದರೆ ಅರ್ಚಕರಿಗೆ ನೀಡುವ ತಸ್ತೀಕ್‌ ಮೂರು ಬಾರಿ ಹೆಚ್ಚಿಸಿದ್ದು ಸಿದ್ದರಾಮಯ್ಯ ಅವರು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

‘ಸಿ’ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಶ್ರೀಮಂತ ದೇವಸ್ಥಾನಗಳಿಂದ ಹಣವನ್ನು ಬಳಸುವ ಕುರಿತ ಮಸೂದೆಗೆ ವಿಧಾನಮಂಡಲದಲ್ಲಿ ಅನುಮೋದನೆ ಸಿಕ್ಕಿದ್ದು ರಾಜ್ಯಪಾಲರ ಬಳಿಗೆ ಕಳುಹಿಸಲಾಗಿದೆ. ಆದರೆ ಅವರು ಅದನ್ನು ಅನಗತ್ಯವಾಗಿ ರಾಷ್ಟ್ರಪತಿ ಬಳಿಗೆ ಕಳುಹಿಸಿ ಗೊಂದಲ ಸೃಷ್ಟಿಸಿದ್ದಾರೆ ಎಂದು ದಿನೇಶ್ ಗುಂಡುರಾವ್ ದೂರಿದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ನಾಳ ರಾಘವ ಅವರು ಹುಂಡಿ ಕಾಣಿಕೆ ಸರ್ಕಾರಕ್ಕೆ ಹೋಗುತ್ತದೆ ಎಂಬುದು ಅಪ್ಪಟ ಸುಳ್ಳು. ದೇವಸ್ಥಾನಗಳ ಆಡಳಿತ ಸಮಿತಿಗಳೇ ಹುಂಡಿಯನ್ನು ನಿರ್ವಹಿಸುತ್ತಿದ್ದು ಸರ್ಕಾರಕ್ಕೆ ಹಣ ಹೋಗಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟರು. ಹಿಂದೂ ದೇವಾಲಯಗಳ ಹಣವನ್ನು ಅನ್ಯ ಧರ್ಮದವರಿಗೆ ಕೊಡಲಾಗುತ್ತಿದೆ ಎಂದು ರಾಷ್ಟ್ರಮಟ್ಟದಲ್ಲಿ ಸುಳ್ಳು ಸುದ್ದಿ ಹಬ್ಬುವ ಮಾಧ್ಯಮದವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ವ್ಯವಸ್ಥಾಪನಾ ಸಮಿತಿಯ ಸದಸ್ಯರೊಬ್ಬರು ಅಭಿಪ್ರಾಯಪಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.