ಮಂಗಳೂರು: ಮಹಾನಗರ ಪಾಲಿಕೆಯ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸಂಭ್ರಮದ ನಡಿಗೆಯನ್ನು ಶುಕ್ರವಾರ ಆಯೋಜಿಸಲಾಗಿತ್ತು. ಪಾಲಿಕೆ ಕಚೇರಿಯಿಂದ ಹೊರಟ ಮೆರವಣಿಗೆ ಲಾಲ್ ಭಾಗ್ ವೃತ್ತ, ಬ್ರಹ್ಮಶ್ರೀ ನಾರಾಯಣ ಗುರು ವೃತ್ತ, ಮಣ್ಣಗುಡ್ಡೆ ಕೆನರಾ ಉರ್ವ ಶಾಲೆ ಮಾರ್ಗವಾಗಿ ಸಾಗಿ ಪಾಲಿಕೆ ಕಚೇರಿ ತಲುಪಿತು.
ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕ ವೇದವ್ಯಾಸ್ ಕಾಮತ್, ಉಪ ಮೇಯರ್ ಸುಮಂಗಳಾ ರಾವ್, ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಮುಖ್ಯ ಸಚೇತಕ ಸುಧೀರ್ ಶೆಟ್ಟಿ, ಪಾಲಿಕೆ ಸದಸ್ಯರು, ಅಧಿಕಾರಿ ಮತ್ತು ಸಿಬ್ಬಂದಿ ಮತ್ತು ಪೌರಕಾರ್ಮಿಕರು ಹಾಗೂ ವಿವಿಧ ಶಾಲಾ– ಕಾಲೇಜುಗಳ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದರು.
ಕಾರ್ಯಕ್ರಮಕ್ಕೆ ಮುನ್ನ ಪಾಲಿಕೆ ವತಿಯಿಂದ ಪಿ.ಎಂ ಸ್ವನಿಧಿ ಯೋಜನೆಯಡಿ ಇಬ್ಬರು ಸಾರ್ವಜನಿಕರಿಗೆ ಧನ ಸಹಾಯದ ಚೆಕ್ ಅನ್ನು ಮೇಯರ್ ಹಸ್ತಾಂತರ ಮಾಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಸ್ತಾಕ್ಷರವುಳ್ಳ ಪ್ರಶಂಸಾ ಪತ್ರವನ್ನುಪಾಲಿಕೆಯ ಪೌರ ಕಾರ್ಮಿಕರಿಗೆ ಹಸ್ತಾಂತರಿಸಿದರು.
ಸ್ವಾತಂತ್ರ್ಯ ಹೋರಾಟಗಾರರಿಗೆ ನುಡಿ ನಮನ, ಸಾರ್ವಜನಿಕರಿಗೆ ರಂಗೋಲಿ ಸ್ಪರ್ಧೆ ಮುಂತಾದ ಕಾರ್ಯಕ್ರಮಗಳನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪಾಲಿಕೆಯು ಆಯೋಜಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.