ADVERTISEMENT

ಡಿ.ಸಿ. ಮನ್ನಾ ಜಮೀನು ಲಭ್ಯತೆ: ವರದಿ ಸಲ್ಲಿಸಲು ಸಚಿವ ಕೋಟ ಸೂಚನೆ

ಡಿ.ಸಿ. ಮನ್ನಾ ಜಮೀನು ಲಭ್ಯತೆ: ವರದಿ ಸಲ್ಲಿಸಲು ಸಚಿವ ಕೋಟ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2022, 15:56 IST
Last Updated 28 ಏಪ್ರಿಲ್ 2022, 15:56 IST
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರಿನಲ್ಲಿ ಗುರುವಾರ ಸಭೆ ನಡೆಸಿದರು. ಸಚಿವ ಎಸ್. ಅಂಗಾರ ಇದ್ದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರಿನಲ್ಲಿ ಗುರುವಾರ ಸಭೆ ನಡೆಸಿದರು. ಸಚಿವ ಎಸ್. ಅಂಗಾರ ಇದ್ದರು.   

ಮಂಗಳೂರು: ‘ಯಾವ ಗ್ರಾಮದಲ್ಲಿ ಎಷ್ಟು ಡಿ.ಸಿ ಮನ್ನಾ ಜಮೀನು ಲಭ್ಯವಿದೆ ಎಂಬ ಪಟ್ಟಿಯನ್ನು ನೀಡಬೇಕು. ಜತೆಗೆ ಅಂತಹ ಜಾಗದಲ್ಲಿರುವ ಅತಿಕ್ರಮಣಕಾರರು ಯಾರು ಎಂಬುದರ ಮಾಹಿತಿ ನೀಡಬೇಕು’ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚಿಸಿದರು.

2020-21ನೇ ಸಾಲಿನ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಪ್ರಸ್ತಾವ ಸಲ್ಲಿಸದೇ ಬಳಕೆಯಾಗದೆ ಉಳಿದಿರುವ ಅನುದಾನದ ಬಗ್ಗೆ, ಡಿ.ಸಿ ಮನ್ನಾ ಜಮೀನಿನ ಬಗ್ಗೆ ಹಾಗೂ ಸಮಾಜ ಕಲ್ಯಾಣ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ವಿಷಯಗಳ ಬಗ್ಗೆ ಚರ್ಚಿಸಲು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಸಭೆಯಲ್ಲಿ ಅವರು ಮಾತನಾಡಿದರು.

ನಿವೇಶನ ರಹಿತ ಹಾಗೂ ವಸತಿ ರಹಿತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಈಗಾಗಲೇ ನಿವೇಶನ ಕೋರಿ ಅರ್ಜಿ ಸಲ್ಲಿಸಿದ್ದಲ್ಲಿ, ಅವರಿಗೆ ಸರ್ಕಾರದಿಂದ ಅನುಮೋದನೆಯಾಗಿರುವ ಜಾಗವನ್ನು ಗುರುತಿಸಿ ನೀಡಬೇಕು. ಪ್ರತಿಗ್ರಾಮ ಪಂಚಾಯಿತಿಯಲ್ಲಿ ಮನೆ ರಹಿತರು ಹಾಗೂ ನಿವೇಶನ ರಹಿತರ ಪಟ್ಟಿ ಲಭ್ಯ ಇರುವುದರಿಂದ ಅದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲಿಸಿ ಅರ್ಹ ಫಲಾನುಭವಿಗಳ ಪಟ್ಟಿಯನ್ನು ಮೇ 10ರೊಳಗೆ ತಯಾರಿಸಬೇಕು ಎಂದರು.

ADVERTISEMENT

ಪರಿಶಿಷ್ಟ ಜಾತಿಯ 4,974 ಹಾಗೂ ಪರಿಶಿಷ್ಟ ಪಂಗಡದ 501 ಅರ್ಜಿಗಳು ಸಲ್ಲಿಕೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು 223 ಗ್ರಾಮ ಪಂಚಾಯತಿಗಳು ಇದ್ದು, ಪ್ರತಿ ಗ್ರಾಮ ಪಂಚಾಯಿತಿಯಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರನ್ನು ಗುರುತಿಸಿ ಸ್ವಂತ ಜಾಗ, ಮನೆ ಹಾಗೂ ಕೃಷಿ ಭೂಮಿ ಹೊಂದಿರದವರ ಬಗ್ಗೆ ಸಮೀಕ್ಷೆ ಮಾಡಬೇಕು ಎಂದರು.

ಮೀನುಗಾರಿಕೆ ಒಳನಾಡು ಬಂದರು ಹಾಗೂ ಜಲಸಾರಿಗೆ ಸಚಿವ ಎಸ್. ಅಂಗಾರ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಹೆಚ್ಚುವರಿ ಜಿಲ್ಲಾಧಿಕಾರಿ ಎಚ್‌.ಕೆ. ಕೃಷ್ಣಮೂರ್ತಿ, ಪುತ್ತೂರು ಶಾಸಕ ಸಂಜೀವ ಮಠಂದೂರು, ಮೇಯರ್ ಪ್ರೇಮಾನಂದ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.