ADVERTISEMENT

ಆರ್ಥಿಕ ಶಿಸ್ತಿಲ್ಲದ ಬಜೆಟ್‌: ಖಾದರ್‌ ಟೀಕೆ

ಒಂಬತ್ತು ಕೆರೆ ಯೋಜನೆ; ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲಿ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2020, 13:44 IST
Last Updated 2 ಫೆಬ್ರುವರಿ 2020, 13:44 IST
ಯು.ಟಿ. ಖಾದರ್‌
ಯು.ಟಿ. ಖಾದರ್‌   

ಮಂಗಳೂರು: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಬೃಹತ್‌ ಯೋಜನೆಗಳನ್ನು ಘೋಷಿಸಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ನಿಟ್ಟಿನಲ್ಲಿ ಸಂಸದರೂ ಆಗಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಪ್ರಯತ್ನಿಸಬೇಕು ಎಂದು ಶಾಸಕ ಯು.ಟಿ. ಖಾದರ್ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದ ಬಿಜೆಪಿ ಸಂಸದರು ರಾಜ್ಯಕ್ಕೆ ಹೆಚ್ಚಿನ ಯೋಜನೆಗಳು ಮತ್ತು ಅನುದಾನ ಹಂಚಿಕೆಯನ್ನು ಹೆಚ್ಚಿಸಲು ಒತ್ತಾಯಿಸಬೇಕು’ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯವರೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದು, ಜಿಲ್ಲೆಗೆ ಹಲವಾರು ಯೋಜನೆಗಳು ಬರಬಹುದು ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ, ಅದೆಲ್ಲವೂ ಹುಸಿಯಾಗಿದೆ ಎಂದ ಅವರು, ಈ ಬಜೆಟ್‌ನಲ್ಲಿ ಆರ್ಥಿಕ ಶಿಸ್ತು ಇಲ್ಲ. ಜನಸಾಮಾನ್ಯರ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಯ ಕುರಿತೂ ಯಾವುದೇ ಕ್ರಮ ಇಲ್ಲ ಎಂದರು.

ADVERTISEMENT

ದೇಶದ ಆರ್ಥಿಕ ಸ್ಥಿತಿ ಕುಸಿಯುತ್ತಿದ್ದು, ಇಂತಹ ಸಂದರ್ಭದಲ್ಲಿ ಆರ್ಥಿಕತೆಯ ಪುನರುಜ್ಜೀವನಕ್ಕೆ ಬಜೆಟ್‌ನಲ್ಲಿ ಉತ್ತೇಜನ ನೀಡಬೇಕಾಗಿತ್ತು. ಆದರೆ, ಸರ್ಕಾರಿ ಸ್ವಾಮ್ಯದ ಜೀವ ವಿಮಾ ಕಂಪನಿ ಎಲ್‌ಐಸಿ ಮತ್ತು ಐಡಿಬಿಐ ಬ್ಯಾಂಕ್‌ನಲ್ಲಿ ಷೇರುಗಳನ್ನು ಮಾರಾಟ ಮಾಡುವುದಾಗಿ ಕೇಂದ್ರ ಘೋಷಿಸಿದೆ. ಮೂಲಸೌಕರ್ಯಗಳಿಗೆ ಅನುದಾನ ಒದಗಿಸಲು ಕೇಂದ್ರ ಸರ್ಕಾರವು ಬಾಹ್ಯ ವಾಣಿಜ್ಯ ಸಾಲ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿದೇಶಿ ನೇರ ಹೂಡಿಕೆಗೆ ಉತ್ತೇಜನ ನೀಡಿದೆ ಎಂದು ಹೇಳಿದರು.

ಭಾವನಾತ್ಮಕ ಸಮಸ್ಯೆಗಳನ್ನು ಹೆಚ್ಚಿಸುವುದರಿಂದ ದೇಶದ ಅಭಿವೃದ್ಧಿಗೆ ಸಹಾಯವಾಗುವುದಿಲ್ಲ. ರೈತರ ಆದಾಯವನ್ನು ದ್ವಿಗುಣಗೊಳಿಸಲು ಬಜೆಟ್ ಏನನ್ನೂ ಘೋಷಿಸಿಲ್ಲ ಎಂದರು.

ವಸತಿ ಸಚಿವರು ಕ್ರಮ ಕೈಗೊಳ್ಳಲಿ: ಒಂಬತ್ತುಕೆರೆ ಪ್ರದೇಶದಲ್ಲಿ ನನೆಗುದಿಗೆ ಬಿದ್ದಿರುವ ಮನೆಗಳ ನಿರ್ಮಾಣದ ಕುರಿತು ವಸತಿ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಯು.ಟಿ. ಖಾದರ್ ಆಗ್ರಹಿಸಿದರು.

ಈ ಪ್ರದೇಶದಲ್ಲಿ ಇರುವ ಮನೆಗಳನ್ನು ನೆಲಸಮಗೊಳಿಸಿ, ಅಲ್ಲಿ ಅಪಾರ್ಟಮೆಂಟ್ ನಿರ್ಮಿಸುವ ಯೋಜನೆ ಸಿದ್ಧವಾಗಿದೆ. ವಸತಿ ಸಚಿವರು ಈ ಬಗ್ಗೆ ಕ್ರಮ ಕೈಗೊಂಡು, ಶಿಲಾನ್ಯಾಸ ನೆರವೇರಿಸಬೇಕು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯ ಕುರಿತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

390 ಫಲಾನುಭವಿಗಳಿಗೆ ಮನೆಗಳನ್ನು ನಿರ್ಮಿಸುವ ಯೋಜನೆಯನ್ನು 2000 ರಲ್ಲಿ ಪ್ರಾರಂಭಿಸಲಾಯಿತು. ವಸತಿ ಯೋಜನೆಯು ಒಂಬತ್ತುಕೆರೆ ಕಲುಷಿತಗೊಳಿಸುತ್ತದೆ ಎಂಬ ಆತಂಕದಲ್ಲಿದ್ದ ಸ್ಥಳೀಯರು, ಕೋರ್ಟ್‌ ಮೊರೆ ಹೋಗಿದ್ದರು. ಈ ಸಂಬಂಧ ತಡೆಯಾಜ್ಞೆ ನೀಡಿದ್ದ ಕೋರ್ಟ್‌, ಕೆರೆ ಮಾಲಿನ್ಯವನ್ನು ತಡೆಗಟ್ಟಲು ಒಳಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿತ್ತು. ಅದರಂತೆ ಒಳಚರಂಡಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಒಂಬತ್ತುಕೆರೆ ಪ್ರದೇಶದ ಮನೆಗಳ ಸಮಸ್ಯೆಯನ್ನು ಟ್ರೋಲ್ ಮಾಡಿದರೆ ಅಲ್ಲಿ ಮನೆಗಳ ನಿರ್ಮಾಣ ಮಾಡಲು ಸಾಧ್ಯವೇ? ಅದರ ಬದಲು ಯೋಜನೆಯನ್ನು ಪೂರ್ಣಗೊಳಿಸುವಂತೆ ಈ ಭಾಗದ ಬಿಜೆಪಿ ಮುಖಂಡರು ವಸತಿ ಸಚಿವರ ಮೇಲೆ ಒತ್ತಡ ತರಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.