
ಪುತ್ತೂರು: ಬಡಗನ್ನೂರು ಗ್ರಾಮದ ಕೊಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.2ರಂದು ನಡೆದಿದ್ದ ಶಾಲಾ ವಾರ್ಷಿಕೋತ್ಸವದಲ್ಲಿ ಶಿಷ್ಟಾಚಾರ ಉಲ್ಲಂಘನೆ, ಸರ್ಕಾರದ ನಿಯಮ ಉಲ್ಲಂಘನೆ, ಶಾಸಕರನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯ ಶಿಕ್ಷಕಿ ಪುಷ್ಪಾವತಿ, ಶಿಕ್ಷಕ ಗಿರೀಶ್ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ, ಪ್ರಕರಣದ ಕುರಿತು ಇಲಾಖಾ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಾದರೆ ಇಬ್ಬರನ್ನೂ ಅಮಾನತು ಮಾಡುವಂತೆ ಶಾಸಕ ಅಶೋಕ್ ರೈ ಅವರು ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೋಮವಾರ ಸೂಚನೆ ನೀಡಿದ್ದಾರೆ.
ಕಾರ್ಯಕ್ರಮ ಶಿಷ್ಟಾಚಾರದ ಪ್ರಕಾರ ನಡೆದಿಲ್ಲ. ಶಾಸಕರನ್ನು ಕಡ್ಡಾಯವಾಗಿ ಆಹ್ವಾನಿಸಬೇಕಿದ್ದರೂ ನಿಯಮ ಪಾಲಿಸಿಲ್ಲ. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಸ್ಥಳೀಯರೊಬ್ಬರು ಶಾಸಕರ ಬಗ್ಗೆ ಏಕವಚನದಲ್ಲಿ ಮಾತನಾಡಿ ಸಭಿಕರ ಮುಂದೆ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಅವಹೇಳನ ಮಾಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ. ಶಾಸಕರನ್ನು ಹಿಯಾಳಿಸಿ ಭಾಷಣ ಮಾಡುವ ವೇಳೆ ವೇದಿಕೆಯಲ್ಲಿದ್ದ ಪುಷ್ಪಾವತಿ ಮತ್ತು ಗಿರೀಶ್ ಚಪ್ಪಾಳೆ ತಟ್ಟಿ ಪ್ರೋತ್ಸಾಹ ನೀಡಿದ್ದರು ಎಂದು ಶಾಲೆಯ ಪೋಷಕರು ಶಾಸಕರಿಗೆ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.